ನವದೆಹಲಿ: ಕೊರೋನಾ ವೈರಸ್ ನ 2 ನೇ ಅಲೆ ದೇಶವನ್ನು ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಬಡವರಿಗೆ ಪೌಷ್ಟಿಕ ಆಹಾರ ದೊರೆಯುವಂತೆ ಮಾಡಲು ಮೇ, ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರ್ಕಾರ ವಿತರಣೆ ಮಾಡಲಿದೆ.
ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಮೇ, ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರ್ಕಾರ ವಿತರಣೆ ಮಾಡಲಿದೆ ಎಂದು ಸರ್ಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಪ್ರತಿ ವ್ಯಕ್ತಿಗೆ ಪ್ರತಿ ತಿಂಗಳಿಗೆ 5 ಕೆ.ಜಿಯಷ್ಟು ಆಹಾರ ಧಾನ್ಯಗಳು ಸಿಗಲಿದ್ದು, ಒಟ್ಟು 80 ಕೋಟಿ ಫಲಾನುಭವಿಗಳಿಗೆ 2 ತಿಂಗಳ ಕಾಲ ಉಚಿತ ಧಾನ್ಯಗಳು ಲಭ್ಯವಾಗಲಿದೆ. ಕಳೆದ ವರ್ಷ ಕೊರೋನಾ ಲಾಕ್ ಡೌನ್ ವಿಧಿಸಿದ್ದಾಗ ಪ್ರಧಾನಿ ನರೇಂದ್ರ ಮೋದಿ ಬಡವರಿಗೆ ಧಾನ್ಯಗಳನ್ನು ನೀಡುವ ಯೋಜನೆಯನ್ನು ಘೋಷಿಸಿದ್ದರು.
ಕೊರೋನಾ ಎರಡನೇ ಅವಧಿಯಲ್ಲಿ ಬಡ ಜನತೆಗೆ ಪೌಷ್ಟಿಕ ಆಹಾರಕ್ಕೆ ಪ್ರಧಾನಿ ಮೋದಿ ಹೆಚ್ಚು ಒತ್ತು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಯೋಜನೆಗಾಗಿ ಭಾರತ ಸರ್ಕಾರ 26,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಿದೆ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಕಾರ್ಯದರ್ಶಿ ಸುಧಾಂಶು ಪಾಂಡೇ ತಿಳಿಸಿದ್ದಾರೆ.
Advertisement