ಡೆಲ್ಟಾ ಪ್ಲಸ್ ರೂಪಾಂತರಿಗೆ ಮೊದಲ ಬಲಿ; ಮಧ್ಯ ಪ್ರದೇಶದಲ್ಲಿ 23 ವರ್ಷದ ಯುವತಿ ಸಾವು; 2 ಡೋಸ್ ಲಸಿಕೆ ಪಡೆದಿದ್ದ 4 ಮಂದಿ ಗುಣಮುಖ

ದೇಶದಲ್ಲಿ ವ್ಯಾಪಕ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್ ನ ಡೆಲ್ಟಾ ಪ್ಲಸ್ ರೂಪಾಂತರಕ್ಕೆ ಮೊದಲ ಬಲಿಯಾಗಿದ್ದು, ಮಧ್ಯ ಪ್ರದೇಶದಲ್ಲಿ ಸೋಂಕಿಗೆ ತುತ್ತಾಗಿದ್ದ 23 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ದೇಶದಲ್ಲಿ ವ್ಯಾಪಕ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್ ನ ಡೆಲ್ಟಾ ಪ್ಲಸ್ ರೂಪಾಂತರಕ್ಕೆ ಮೊದಲ ಬಲಿಯಾಗಿದ್ದು, ಮಧ್ಯ ಪ್ರದೇಶದಲ್ಲಿ ಸೋಂಕಿಗೆ ತುತ್ತಾಗಿದ್ದ 23 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ.

ದೇಶದಲ್ಲಿ ನಿಧಾನಗತಿಯಲ್ಲಿ ಕೊರೊನಾ ರೂಪಾಂತರ ತಳಿ ಡೆಲ್ಟಾ ಪ್ಲಸ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವಾಗಲೇ ಡೆಲ್ಟಾ ಪ್ಲಸ್ ರೂಪಾಂತರ ತಳಿಗೆ ಮೊದಲ ಬಲಿ ಆಗಿದೆ. ಮಧ್ಯಪ್ರದೇಶದ ಭೂಪಾಲ್‌ ಲ್ಲಿ 23 ವರ್ಷದ ಯುವತಿಯೊಬ್ಬರು ಡೆಲ್ಟಾ ಪ್ಲಸ್ ರೂಪಾಂತರ ತಳಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸೋಂಕು ಕಾಣಿಸಿಕೊಂಡು ಭೂಪಾಲ್‌ನ ಪಾಟಿಧಾರ್ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಸೇರಿದಂತೆ ಐವರಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿತ್ತು. ಈ ಪೈಕಿ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಉಳಿದ ನಾಲ್ವರು ಚೇತರಿಸಿಕೊಂಡಿದ್ದಾರೆ ಎಂದು ಮಧ್ಯಪ್ರದೇಶ ಸರ್ಕಾರ ಹೇಳಿದೆ.

ಮೃತ ಯುವತಿ ಉಜ್ಜೈನ್ ಮೂಲದ ನಿವಾಸಿಯಾಗಿದ್ದು, ಮೂವರು ಸೋಂಕಿತರು ಭೋಪಾಲ್ ಮತ್ತು ಇತರೆ ಇಬ್ಬರು ಉಜ್ಜೈನ್ ನಿವಾಸಿಗಳೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಧ್ಯ ಪ್ರದೇಶ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಅವರು ಮಾತನಾಡಿದ್ದು, ರಾಜ್ಯದಲ್ಲಿ ಈ ವರೆಗೂ 5 ಡೆಲ್ಟಾ ಪ್ಲಸ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಒಬ್ಬರು ಸಾವನ್ನಪ್ಪಿದ್ದು, ಉಳಿದ ನಾಲ್ವರಿಗೆ ಚಿಕಿತ್ಸೆ ಮುಂದುವರೆದಿದೆ. ರಾಜ್ಯ ಸರ್ಕಾರ ಡೆಲ್ಟಾ ರೂಪಾಂತರ ನಿಯಂತ್ರಣಕ್ಕೆ ಸಕಲ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು. 

ಪೂರ್ಣ ಪ್ರಮಾಣದ ಲಸಿಕೆ ಪಡೆದಿದ್ದ ಸೋಂಕಿತರು ಗುಣಮುಖ
ಇನ್ನು ಮೃತ ಯುವತಿಯ ಗಂಡ ಎರಡೂ ಪ್ರಮಾಣದ ಕೋವಿಡ್ ಲಸಿಕೆ ಪಡೆದಿದ್ದರು ಎಂದು ಹೇಳಿದ ಸಚಿವ ವಿಶ್ವಾಸ್ ಸಾರಂಗ್ ಅವರು, ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕಿಗೆ ತುತ್ತಾಗಿ ಗುಣಮುಖರಾದ ನಾಲ್ಕೂ ಮಂದಿ ಸೋಂಕಿತರು ಕೂಡ ಎರಡೂ ಪ್ರಮಾಣದ ಲಸಿಕೆ ಪಡೆದಿದ್ದರು ಎಂದು ಮಾಹಿತಿ ನೀಡಿದರು.

ದೇಶಾದ್ಯಂತ ಕಟ್ಟೆಚ್ಚರ
ಇನ್ನು ದೇಶದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಡೆಲ್ಟಾ ಪ್ಲಸ್ ಪತ್ತೆಯಾಗಿರುವ ಬೆನ್ನಲ್ಲೆ ಕೇಂದ್ರ ಸರ್ಕಾರ ಡೆಲ್ಟಾ ಪ್ಲಸ್ ರೂಪಾಂತರ ತಳಿ ತಡೆಗೆ ಬಿಗಿಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದ್ದು, ಡೆಲ್ಟಾ ಪ್ಲಸ್ ಕಾಣಿಸಿಕೊಂಡಿರುವ ರಾಜ್ಯಗಳಿಗೆ ಕಂಟೈನ್ಮೆಂಟ್ ವಲಯಗಳನ್ನು ಸ್ಥಾಪಿಸಿ ಬಿಗಿಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. 

ಕೊರೊನಾ ಡೆಲ್ಟಾ ಪ್ಲಸ್ ರೂಪಾಂತರ ತಳಿ ಕಾಣಿಸಿಕೊಂಡಿರುವ ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ, ಕರ್ನಾಟಕ, ತಮಿಳುನಾಡು, ಜಮ್ಮು-ಕಾಶ್ಮೀರ ಸೇರಿದಂತೆ ಎಲ್ಲ ರಾಜ್ಯಗಳಿಗೂ ಡೆಲ್ಟಾ ಪ್ಲಸ್ ತಡೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿರುವ ಕೇಂದ್ರ ಸರ್ಕಾರ ಡೆಲ್ಟಾ ಪ್ಲಸ್‌ ನ ಪ್ರಸರಣ ತೀವ್ರವಾಗಿರುವ ಮಹಾರಾಷ್ಟ್ರ. ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಿಗೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.

ಸಮೀಕ್ಷೆಗೆ ನಿರ್ಧಾರ
ದೇಶದ ಹಲವು ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದರ ಸಮೀಕ್ಷೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ಪುಣೆಯ ವೈರಾಣು ಸಂಸ್ಥೆ ಮುಂದಾಗಿದೆ. ಡೆಲ್ಟಾ ಪ್ಲಸ್ ರೂಪಾಂತರ ಸೋಂಕು ಕಾಣಿಸಿಕೊಂಡಿರುವ ರಾಜ್ಯಗಳಲ್ಲಿ ಮೊದಲು ಅಧ್ಯಯನ ಮಾಡಿ ಆನಂತರ ದೇಶದ ಎಲ್ಲ ರಾಜ್ಯಗಳಲ್ಲಿ ಈ ಕುರಿತು ಸಮೀಕ್ಷೆ ನಡೆಸುವುದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com