ಲಖೀಂಪುರ್ ಖೇರಿ ಹಿಂಸಾಚಾರ: ನಾಳೆ ಸುಪ್ರೀಂನಲ್ಲಿ ವಿಚಾರಣೆ
ನವದೆಹಲಿ: ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖೀಂಪರ್ ಖೇರಿಯಲ್ಲಿ ಸಂಭವಿಸಿದ್ದ ಹಿಂಸಾಚಾರ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆ ಕೈಗೆತ್ತಿಕೊಳ್ಳಲಿದೆ. ರೈತರ ಪ್ರತಿಭಟನೆ ಹಿಂಸಾಚಾರಗಿ ತಿರುಗಿ ನಾಲ್ವರು ರೈತರು ಸೇರಿದಂತೆ 8 ಮಂದಿ ಹತ್ಯೆಯಾಗಿದ್ದರು.
ಎಂಟು ಮಂದಿಯ ಬರ್ಬರ ಹತ್ಯೆ ಪ್ರಕರಣದಲ್ಲಿ ಉತ್ತರ ಪ್ರದೇಶ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಅಕ್ಟೋಬರ್ 8 ರಂದು ಅತೃಪ್ತಿ ವ್ಯಕ್ತಪಡಿಸಿದ್ದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ, ನಾಳೆಗೆ ಮುಂದಿನ ವಿಚಾರಣೆಯನ್ನು ಮುಂದೂಡಿತ್ತು.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ ಈವರೆಗೆ ಹತ್ತು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಘಟನೆ ಬಗ್ಗೆ ಸಿಬಿಐ ಸೇರಿದಂತೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ಆಗಬೇಕು ಎಂದು ಇಬ್ಬರು ವಕೀಲರು ಸಿಜೆಐಗೆ ಪತ್ರ ಬರೆದ ನಂತರ ಉನ್ನತ ನ್ಯಾಯಾಲಯ ಈ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದೆ.
ಅಕ್ಟೋಬರ್ 3 ರಂದು ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರೋಧಿಸಿ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿ ವಿರುದ್ಧ ಲಖೀಂಪುರ್ ಖೇರಿಯಲ್ಲಿ ರೈತರ ಗುಂಪೊಂದು ಪ್ರತಿಭಟನೆ ನಡೆಸುತ್ತಿದ್ದಾಗ ಕಾರನ್ನು ಹರಿಸಿ, ನಾಲ್ವರು ರೈತರನ್ನು ಹತ್ಯೆಗೈಯಲಾಗಿತ್ತು. ಆಕ್ರೋಶಗೊಂಡ ರೈತರು ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಒಬ್ಬ ಡ್ರೈವರ್ ಗೆ ಹಿಗ್ಗಾಮುಗ್ಗಾ ಥಳಿಸಿ ಹತ್ಯೆ ಮಾಡಿದ್ದರು. ಘಟನೆಯಲ್ಲಿ ಓರ್ವ ಪತ್ರಕರ್ತ ಕೂಡಾ ಅಸುನೀಗಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ