ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಬಕ್ಷಿವಾಲಾ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಕ್ಷಿವಾಲ ಪ್ರದೇಶದ ಬುಖರಾ ಗ್ರಾಮದಲ್ಲಿ ಯೂಸುಫ್ ಎಂಬ ವ್ಯಕ್ತಿ ಅಕ್ರಮವಾಗಿ ಪಟಾಕಿ ತಯಾರಿಕಾ ಕಾರ್ಖಾನೆಯನ್ನು ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟ ಎಷ್ಟು ತೀವ್ರವಾಗಿತ್ತೆಂದರೆ, ಮನೆಯ ಒಂದು ಭಾಗವು ಸಂಪೂರ್ಣ ನಾಶವಾಗಿದೆ. ಮೃತಪಟ್ಟ ಐವರು ಕಾರ್ಮಿಕರ ಮೃತದೇಹಗಳು ಸಂಪೂರ್ಣ ಸುಟ್ಟುಹೋಗಿವೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿ ಒಟ್ಟು ಒಂಬತ್ತು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಗನ್ಪೌಡರ್ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು ಭಾರಿ ಸ್ಫೋಟ ಸಂಭವಿಸಿದೆ.
ಕಾರ್ಖಾನೆಯ ಮಾಲೀಕ ಹಾಗೂ ಪಟಾಕಿ ಮಾರಾಟ ಪರವಾನಿಗೆಯನ್ನೂ ಹೊಂದಿರುವ ಯೂಸುಫ್ನನ್ನು ಬಂಧಿಸಲಾಗಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಧರಮ್ವೀರ್ ಸಿಂಗ್ ತಿಳಿಸಿದ್ದಾರೆ.
ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸ್ಥಳೀಯ ಮಟ್ಟದಲ್ಲಿ ಎಲ್ಲ ಸಹಾಯ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Advertisement