ನವದೆಹಲಿ: ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶದ 5 ಜಿಲ್ಲೆಗಳಲ್ಲಿ ಒಂದು ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಅಲಹಾಬಾದ್ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.
ನಿನ್ನೆಯಷ್ಟೇ ಆದೇಶ ಹೊರಡಿಸಿದ್ದ ಅಲಹಾಬಾದ್ ಹೈಕೋರ್ಟ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಖನೌ, ಅಲಹಾಬಾದ್, ಕಾನ್ಪುರ್, ವಾರಣಾಸಿ ಮತ್ತು ಗೋರಖ್ಪುರದಲ್ಲಿ ಏ.10-ಏ.26ರವರೆಗೆ ಲಾಕ್ಡೌನ್ ಜಾರಿಗೆ ಸೂಚನೆ ನೀಡಿತ್ತು.
ಆದರೆ, ಈ ಆದೇಶಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ನ್ಯಾಯಾಲಯದ ಆದೇಶದಿಂದ ಬಡವರು ಮತ್ತು ಜನ ಸಾಮಾನ್ಯರ ಜೀವನಕ್ಕೆ ತೊಂದರೆಯಾಗಲಿದೆ ಎಂದು ಪ್ರತಿಪಾದಿಸಿತ್ತು. ಅಲ್ಲದೆ, ಸರ್ಕಾರ ಪೂರ್ಣ ಪ್ರಮಾಣದ ಲಾಕ್ಡೌನ್ ಮಾಡುವುದಿಲ್ಲ ಎಂದು ಹೇಳಿತ್ತು. ಬಳಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.
ಇದರಂತೆ ಈ ಕುರಿತಂತೆ ವಿಚಾರಣೆ ನಡೆಸಲು ಇಂದು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿತ್ತು. ಇದೀಗ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಅಲ್ಲದೆ, ಕೊರೋನಾ ಸೋಂಕು ನಿಯಂತ್ರಿಸಲು ಸರ್ಕಾರ ತೆಗೆದುಕೊಂಡಿರುವ ಹಲವು ಕ್ರಮಗಳ ಕುರಿತು ವಾರದೊಳಗೆ ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆಯೂ ಸೂಚನೆ ನೀಡಿದೆ.
Advertisement