ಎಸ್‌ಟಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಬೊಮ್ಮಾಯಿ ನೇತೃತ್ವದ ಮೊದಲ ಸಂಪುಟ ಸಭೆ ಅಸ್ತು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬುಧವಾರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಪರಿಶಿಷ್ಟ ಪಂಗಡದ ಕುಂದುಕೊರತೆ ಪರಿಹರಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಅನುಮೋದನೆ ನೀಡಿದೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬುಧವಾರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಪರಿಶಿಷ್ಟ ಪಂಗಡದ ಕುಂದುಕೊರತೆ ಪರಿಹರಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಅನುಮೋದನೆ ನೀಡಿದೆ.

ಇತ್ತೀಚಿನ ಪ್ರವಾಹ ಮತ್ತು ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯ ಹಿನ್ನೆಲೆಯಲ್ಲಿ ತಮ್ಮ ನೂತನ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಪ್ರಮಾಣವಚನ ಸ್ವೀಕರಿಸಿದ ಕೆಲವು ಗಂಟೆಗಳಲ್ಲೇ ಜಿಲ್ಲಾ ಉಸ್ತುವಾರಿ ನೀಡಿದ್ದ ಬೊಮ್ಮಾಯಿ ಅವರು, ಎರಡ್ಮೂರು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದಾಗಿ ಹೇಳಿದ್ದಾರೆ.

ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ನಂತರ ಕೋವಿಡ್ -19ರ ಟಾಸ್ಕ್ ಫೋರ್ಸ್ ಅನ್ನು ಪುನರ್ರಚಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಬೊಮ್ಮಾಯಿ ಸಂಪುಟದ ಮೊದಲ ಸಭೆಯು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ನಿರ್ಧಾರ ತೆಗೆದುಕೊಂಡಿದೆ.

ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಪ್ರತಿಕ್ರಿಯಿಸಿದ ಸಚಿವ ಬಿ ಶ್ರೀರಾಮುಲು ಅವರು,  “ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ವಿಶೇಷ ಸಚಿವಾಲಯ ಸ್ಥಾಪಿಸುವ ಮೂಲಕ ಮಾದರಿಯಾಗಿದ್ದರು. ಸಮುದಾಯದ ಒಟ್ಟಾರೆ ಅಭಿವೃದ್ಧಿಗೆ ಒತ್ತು ನೀಡುವುದರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅದನ್ನು ಮುಂದುವರಿಸಿದ್ದಾರೆ.

 ಕರ್ನಾಟಕದಲ್ಲಿ ನಾವು ಅವರ ಹೆಜ್ಜೆಗಳನ್ನು ಅನುಸರಿಸಿದ್ದೇವೆ ಮತ್ತು ನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್‌ಟಿಗಳ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಾಲಯವನ್ನು ಸ್ಥಾಪಿಸುವ ಕುರಿತು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ಆದ್ಯತೆಯ ಮೇರೆಗೆ ನಮ್ಮ ವಿನಂತಿಯನ್ನು ಸ್ವೀಕರಿಸಿದ ನಮ್ಮ ಹಿಂದಿನ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com