ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ. ಇನ್ನೂ ಅವಶೇಷಗಳಡಿಯಲ್ಲಿ ಹಲವರು ಸಿಕ್ಕಿಹಾಕಿಕೊಂಡಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಸ್ಥಳದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಕಾರ್ಯಾಚರಣೆಯಲ್ಲಿ 13 ಮಂದಿಯನ್ನು ರಕ್ಷಿಸಲಾಗಿದೆ. ಒಂದು ಬಸ್ಸು ಅವಶೇಷಗಳಡಿಯಲ್ಲಿ ಪತ್ತೆಯಾಗಿದ್ದು ಓರ್ವನ ಶವ ಹೊರತೆಗೆಯಲಾಗಿದೆ. ಬೊಲೆರೊ ಮತ್ತು ಅದರಲ್ಲಿದ್ದ ಪ್ರಯಾಣಿಕರು ಇನ್ನೂ ಅವಶೇಷಗಳಡಿಯಲ್ಲಿ ಪತ್ತೆಯಾಗಿಲ್ಲ ಎಂದು ಐಟಿಬಿಪಿ ಉಪ ಕಮಾಂಡರ್ ಧರ್ಮೇಂದ್ರ ಠಾಕೂರ್ ತಿಳಿಸಿದ್ದಾರೆ.
ಪ್ರಧಾನಿ ಪರಿಹಾರ ಘೋಷಣೆ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ನಿಜಕ್ಕೂ ದುಃಖಕರ ಸಂಗತಿ, ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಆಶಿಸಿರುವ ಪ್ರಧಾನಿ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಕುಟುಂಬಕ್ಕೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
Advertisement