ಮತಾಂತರ ನಿಷೇಧ ಕಾಯ್ದೆ ಬಗ್ಗೆ ಬಿಜೆಪಿ ಶಾಸಕಾಂಗ ಪಕ್ಷದಲ್ಲಿ ವಿಸ್ತೃತ ಚರ್ಚೆ: ಗೃಹ ಸಚಿವ
ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
Published: 15th December 2021 06:43 PM | Last Updated: 15th December 2021 06:43 PM | A+A A-

ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಡಿ.15 ರಂದು ಸಂಜೆ ಬೆಳಗಾವಿಯಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಆರಗ ಜ್ಞಾನೇಂದ್ರ, ಮಸೂದೆಯನ್ನು ಶಾಸನ ಸಭೆಗೆ ತರುವುದಕ್ಕೂ ಮುನ್ನ ಅದರ ಮಹತ್ವವನ್ನು ಶಾಸಕರಿಗೆ ತಿಳಿಸಬೇಕು ಎಂದು ಸಚಿವರು ಹೇಳಿದ್ದಾರೆ.
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುತ್ತಿರುವುದನ್ನು ವಿರೋಧಿಸಿ ಮಹಾಮೇಳವ್ ನಡೆಸಲು ಯತ್ನಿಸಿದ ಎಂಇಎಸ್ ನಾಯಕನ ಮುಖಕ್ಕೆ ಕಪ್ಪು ಮಸಿ ಬಳಿದ ಸಂಪತ್ ಕುಮಾರ್ ದೇಸಾಯಿ ವಿರುದ್ಧದ ಪ್ರಕರಣವನ್ನು ಪೊಲೀಸರು ಹಿಂಪಡೆಯುತ್ತಾರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವರು, ಈ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನು ಪೊಲೀಸ್ ಇಲಾಖೆ ಜರುಗಿಸಲಿದೆ, ಮಹಾಮೇಳವ್ ಆಯೋಜನೆ ಮಾಡಿದವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದಷ್ಟೇ ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ಬೆಳಗಾವಿಯ ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟ್ಗಿಮಠ ಸೋಲಿಗೆ ಕಾರಣರಾದ ಪಕ್ಷದವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆಯೇ? ಎಂಬ ಪ್ರಶ್ನೆಗೆ ಪಕ್ಷದ ನಾಯಕತ್ವ ಅದನ್ನು ತೀರ್ಮಾನಿಸಲಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.