ನವದೆಹಲಿ: ಕರ್ನಾಟಕದ ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ಕೆ ಆರ್ ರಮೇಶ್ ಕುಮಾರ್ ಸದನದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಬಗ್ಗೆ ನೀಡಿದ್ದ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಇಂದು ಲೋಕಸಭೆಯಲ್ಲಿ ಕೂಡ ಸದ್ದು ಮಾಡಿತು. ಕಾಂಗ್ರೆಸ್ ನಾಯಕರು ಸಹ ರಮೇಶ್ ಕುಮಾರ್ ಹೇಳಿಕೆಯನ್ನು ಖಂಡಿಸುತ್ತಿದ್ದಾರೆ.
ಇಂದು ಲೋಕಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಕೆ ಸಚಿವೆ ಸ್ಮೃತಿ ಇರಾನಿ ಈ ವಿಷಯವನ್ನು ಪ್ರಸ್ತಾಪಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ‘ಮಹಿಳೆ ಅತ್ಯಾಚಾರಕ್ಕೊಳಗಾದಾಗ ಆನಂದಿಸಬೇಕು’ ಎಂದು ವಿಧಾನಸೌಧದೊಳಗೆ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಹೇಳಿರುವುದು ಮಹಿಳೆಯರ ನಾಚಿಕೆಗೇಡಿನ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಲೋಕಸಭೆಯಲ್ಲಿಂದು ಮಾತನಾಡಿ ಖಂಡಿಸಿದ್ದಾರೆ.
ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷವು ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಪ್ರಾಮಾಣಿಕವಾಗಿಲ್ಲ. ರಮೇಶ್ ಕುಮಾರ್ ಅವರ ಹೇಳಿಕೆಯನ್ನು ಖಂಡಿಸಿ ಪಕ್ಷ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಮಹಿಳಾ ಸಶಕ್ತೀಕರಣ ಬಗ್ಗೆ ಮಾತನಾಡುವ ಕಾಂಗ್ರೆಸ್, ಹುಡುಗಿಯಾದರೂ ಹೋರಾಟ ನಡೆಸಬಹುದು ಎಂದು ಉತ್ತರ ಪ್ರದೇಶದಲ್ಲಿ ಘೋಷಣೆ ಕೂಗುವ ಪಕ್ಷ ಮೊದಲು ಈ ಕಾಂಗ್ರೆಸ್ ನಾಯಕನನ್ನು ಅಮಾನತು ಮಾಡಲಿ ಎಂದು ಒತ್ತಾಯಿಸಿದ್ದಾರೆ.
Advertisement