ನವದೆಹಲಿ: ಪಕ್ಷದಲ್ಲಿ ನಾಯಕತ್ವ ಬದಲಾವಣೆ ಪ್ರಸ್ತಾಪಕ್ಕೆ ಬ್ರೇಕ್ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾಡಿದ್ದಾರೆ. ಶನಿವಾರ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡಿದ ನಂತರ ತಮ್ಮ ವಿರೋಧಿ ಬಣಕ್ಕೆ ಸರಿಯಾದ ತಿರುಗೇಟು ನೀಡಿದ್ದಾರೆ.
ನಿನ್ನೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿನ ಬೆಳವಣಿಗೆಯ ಕೆಲಸಗಳು ಮತ್ತು ಕೋವಿಡ್ ಸ್ಥಿತಿಗತಿ ಬಗ್ಗೆ ಮಾತನಾಡಿದ ನಂತರ ಇಂದು ತಮ್ಮ ಪುತ್ರ ಬಿ ವೈ ವಿಜಯೇಂದ್ರ ಅವರ ಜೊತೆಗೂಡಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ನಿನ್ನೆ ಹಾಗೂ ಇಂದು ಈವರೆಗೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳೇ ಬಂದಿಲ್ಲ ಎಂದು ಹೇಳಲಾಗುತ್ತಿದೆ.
ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ ಎಸ್ ಯಡಿಯೂರಪ್ಪ, ಕರ್ನಾಟಕದಲ್ಲಿ ಪಕ್ಷದ ಬೆಳವಣಿಗೆ ಬಗ್ಗೆ ವಿವರವಾಗಿ ಚರ್ಚೆ ನಡೆಸಿದ್ದೇವೆ. ನನ್ನ ಬಗ್ಗೆ ಅಧ್ಯಕ್ಷರು ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ. 2023ರ ಚುನಾವಣೆಯಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ನಾನು ಶ್ರಮಿಸುತ್ತೇನೆ ಎಂದರು.
ನಡ್ಡಾ ಅವರು ಕೂಡ ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರುವುದರತ್ತ ಗಮನ ಹರಿಸಿ ಎಂದು ಸೂಚಿಸಿದ್ದಾರೆ. ನನ್ನ ಬಳಿ ಯಾರೂ ರಾಜೀನಾಮೆ ಕೇಳಿಲ್ಲ, ನಾಯಕತ್ವ ಬದಲಾವಣೆ ವಿಷಯ ಚರ್ಚೆಗೇ ಬಂದಿಲ್ಲ ಎಂದು ಕೂಡ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಬಳಿಕ ಸಿಎಂ ತಮ್ಮ ಪುತ್ರನೊಡಗೂಡಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
Advertisement