ಚಂಡೀಘಡ: ಪಂಜಾಬ್ ರಾಜ್ಯ ಕಾಂಗ್ರೆಸ್ ಘಟಕದ ಪುನರ್ ರಚನೆ ಸಾಧ್ಯತೆ ಹಿನ್ನೆಲೆಯಲ್ಲಿ ಸೋಮವಾರ ಪಕ್ಷದ ಶಾಸಕರು ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರ ಸಭೆಯನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಸುನೀಲ್ ಜಖಾರ್ ಕರೆದಿದ್ದಾರೆ.
ನಾಳೆ ನಡೆಯುವ ಸಭೆಯಲ್ಲಿ ಪಂಜಾಬ್ಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರವು ಇಡೀ ರಾಜ್ಯ ಘಟಕಕ್ಕೆ ಸ್ವೀಕಾರಾರ್ಹ ಎಂದು ಹೇಳುವ ನಿರ್ಣಯವನ್ನು ಎಲ್ಲಾ ಶಾಸಕರು ಹಾಗೂ ಜಿಲ್ಲಾ ಅಧ್ಯಕ್ಷರು ಅಂಗೀಕರಿಸಲಿದ್ದಾರೆ. ತದನಂತರ ಇದನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಲಾಗುವುದು ಎಂದು ಜಖಾರ್ ಭಾನುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪಂಜಾಬ್ಗೆ ಸಂಬಂಧಿಸಿದಂತೆ ಹೈಕಮಾಂಡ್ ತೆಗೆದುಕೊಳ್ಳಲು ಬಯಸುವ ಯಾವುದೇ ನಿರ್ಧಾರವನ್ನು ತ್ವರಿತವಾಗಿ ತೆಗೆದುಕೊಳ್ಳಬೇಕು, ಇದರಿಂದಾಗಿ ಪಕ್ಷವು ರಾಜ್ಯದ ಜನರಿಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಜಖಾರ್ ಮನವಿ ಮಾಡಿದ್ದಾರೆ. ನಾಳೆ ಮಧ್ಯಾಹ್ನ ಮೂರು ಗಂಟೆಗೆ ಪಂಜಾಬ್ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಪಂಜಾಬ್ ಘಟಕದ ಆಂತರಿಕ ಭಿನ್ನಾಭಿಪ್ರಾಯ ಶಮನಗೊಳಿಸುವ ನಿಟ್ಟಿನಲ್ಲಿ ಹೈಕಮಾಂಡ್ ನಿಂದ ನವಜೋತ್ ಸಿಂಗ್ ಸಿಧು ಪಕ್ಷದ ಅಧ್ಯಕ್ಷರನ್ನಾಗಿ ಹಾಗೂ ಇಬ್ಬರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗುತ್ತಿದೆ ಎಂಬ ಅನುಮಾನಗಳ ನಡುವೆ ಜಖಾರ್ ಈ ರೀತಿಯ ಹೇಳಿಕೆ ನೀಡಿದ್ದಾರೆ.
Advertisement