ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಮಾಜಿ ಪೊಲೀಸ್, ಎನ್ಕೌಂಟರ್ ಸ್ಪೆಷಲಿಸ್ಟ್ ಹಾಗೂ ಶಿವಸೇನೆ ನಾಯಕರಾಗಿರುವ ಪ್ರದೀಶ್ ಶರ್ಮಾ ಅವರ ನಿವಾಸದ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆಂದು ಬಂದಿದೆ.
ಮನ್ಸುಖ್ ಹಿರೇನ್ ಪ್ರಕರಣದಲ್ಲಿ ಶರ್ಮಾ ಅವರು ಆರೋಪಿಗಳಿಗೆ ಸಹಾಯ ಮಾಡಿರುವ ಕುರಿತು ಸುಳಿವುಗಳು ದೊರೆತ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಫೆ. 25ರಂದು ಮುಕೇಶ್ ಅಂಬಾನಿ ಅವರ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾಗಿತ್ತು. ಈ ಕುರಿತು ಪ್ರಕರಣದ ತನಿಖೆಯನ್ನು ಎನ್ಐಎ ನಡೆಸುತ್ತಿದೆ. ಸ್ಫೋಟಕ ತುಂಬಿದ್ದ ವಾಹನದಲ್ಲಿ ಬೆದರಿಕೆಯ ಪತ್ರವೂ ಇತ್ತು.
ಮುಕೇಶ್ ಅವರ ನಿವಾಸದ ಬಳಿ ಪತ್ತೆಯಾಗಿದ್ದ ವಾಹನವು ಮನ್ಸುಖ್ ಹಿರೇನ್ ಅವರಿಗೆ ಸೇರಿದ್ದಾಗಿತ್ತು, ಈ ವಾಹನ ಕಳವಾಗಿದ್ದ ಕುರಿತು ವಾರದ ಹಿಂದೆಯಷ್ಟೇ ಹಿರೇನ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಮಾರ್ಚ್ 5ರಂದು ಹಿರೇನ್ ಅವರ ಶವವು ಠಾಣೆ ಸಮೀಪ ಪತ್ತೆಯಾಗಿತ್ತು.
Advertisement