ನವದೆಹಲಿ: ಬಹುಕೋಟಿ ನಾರದಾ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಕಾನೂನು ಸಚಿವ ಮೊಲೊಯ್ ಘಟಕ್ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ್ದು, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರಿಗೆ ಸಂಬಂಧಿಸಿದ ನಾರದಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾದ ಅಫಿಡವಿಟ್ ಅನ್ನು ತೆಗೆದುಕೊಳ್ಳಲು ನಿರಾಕರಿಸಿದ ಕೋಲ್ಕತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಅಂತೆಯೇ ಅಫಿಡವಿಟ್ ದಾಖಲೆಗಳನ್ನು ಮರುಪರಿಶೀಲಿಸುವಂತೆ ಕೋರಿ ಹೈಕೋರ್ಟ್ ಗೆ ಹೊಸದಾಗಿ ಮನವಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಬಂಗಾಳ ಸರ್ಕಾರ ಮತ್ತು ಮೂಲೊಯ್ ಘಟಕ್ ಅವರಿಗೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಇಂದಿರಾ ಬ್ಯಾನರ್ಜಿ ಎಂಬ ಇಬ್ಬರು ನ್ಯಾಯಾಧೀಶರು ಈ ಪ್ರಕರಣದ ವಿಚಾರಣೆಯಿಂದ ಸ್ವತಃ ಹಿಂದೆ ಸರಿದ ನಂತರ ಸುಪ್ರೀಂಕೋರ್ಟ್ ಈ ಆದೇಶ ನೀಡಿರುವುದಾಗಿ ವರದಿ ತಿಳಿಸಿದೆ. ಕೊನೆಗೂ ಈ ಪ್ರಕರಣವನ್ನು ಮಂಗಳವಾರ ನ್ಯಾಯಮೂರ್ತಿ ವಿನೀತ್ ಶರಣ್ ಮತ್ತು ದಿನೇಶ್ ಮಹೇಶ್ವರಿ ಅವರ ರಜೆಯ ಪೀಠವು ಮರು ನಿಯೋಜನೆಗೆ ಸೂಚಿಸಿ, ಶುಕ್ರವಾರ ವಿಚಾರಣೆ ನಡೆಸುವಂತೆ ದಿನ ನಿಗದಿ ಮಾಡಿರುವುದಾಗಿ ವರದಿಯಲ್ಲಿ ಹೇಳಲಾಗಿದೆ.
ವರ್ಗಾವಣೆ ಕೋರಿ ಸಿಬಿಐ ಸಲ್ಲಿಸಿರುವ ಅರ್ಜಿ ಕುರಿತು ನಿರ್ಧರಿಸುವ ಮೊದಲು ಮಮತಾ ಬ್ಯಾನರ್ಜಿ, ಘಟಕ್ ಮತ್ತು ರಾಜ್ಯ ಸರ್ಕಾರದ ಮನವಿಯನ್ನು ಹೊಸದಾಗಿ ತೀರ್ಮಾನಿಸಬೇಕು ಎಂದು ಸುಪ್ರೀಂ ಕೋರ್ಟ್ ಹೈಕೋರ್ಟ್ ಗೆ ಹೇಳಿದೆ.
Advertisement