ಸಿಎಂ ಆಗಿ ಅಧಿಕಾರ ಸ್ವೀಕರಿಸಿ 24 ಗಂಟೆ ಕಳೆದಿಲ್ಲ ಆಗಲೆ ಕೇಂದ್ರ ತಂಡಗಳು ಬರ ತೊಡಗಿವೆ: ಮಮತಾ ಕಿಡಿ

ವಿಧಾನಸಭಾ ಚುನಾವಣೆ ನಂತರ ನಡೆದ ಹಿಂಸಾಚಾರದಲ್ಲಿ 16 ಜನರು ಮೃತಪಟ್ಟಿರುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ತಿಳಿಸಿದ್ದು, ಮೃತರ ಕುಟುಂಬ ಸದಸ್ಯರಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ವಿಧಾನಸಭಾ ಚುನಾವಣೆ ನಂತರ ನಡೆದ ಹಿಂಸಾಚಾರದಲ್ಲಿ 16 ಜನರು ಮೃತಪಟ್ಟಿರುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ತಿಳಿಸಿದ್ದು, ಮೃತರ ಕುಟುಂಬ ಸದಸ್ಯರಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಕಳೆದ ತಿಂಗಳು ಕೂಚ್ ಬೆಹಾರ್ ನ ಸಿತಾಲ್ ಕುಚಿ ಪ್ರದೇಶದಲ್ಲಿ ಸಿಆರ್ ಪಿಎಫ್ ಗುಂಡಿನ ದಾಳಿಯಲ್ಲಿ ಮೃತಪಟ್ಟ ಐವರು ಕುಟುಂಬದ ಸದಸ್ಯರೊಬ್ಬರಿಗೆ ಹೋಮ್ ಗಾರ್ಡ್ಸ್ ಉದ್ಯೋಗ ನೀಡುವುದಾಗಿ ತಿಳಿಸಿದರು.

ಏಪ್ರಿಲ್ 10 ರಂದು ನಾಲ್ಕನೇ ಹಂತದ ಚುನಾವಣೆ ನಡೆಯುವಾಗ ಕೂಚ್ ಬೆಹಾರ್ ನಲ್ಲಿ ನಡೆದ ಗುಂಡಿನ ದಾಳಿ ಘಟನೆ ಕುರಿತು ಸಿಐಡಿ ತಂಡವೊಂದು ತನಿಖೆಯನ್ನು ಆರಂಭಿಸಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರ ನಡೆದ ಹಿಂಸಾಚಾರದಲ್ಲಿ ಕೇಂದ್ರ ನಾಯಕರ ಕುಮ್ಮಕ್ಕು ಇದೆ ಎಂದು ಆರೋಪಿಸಿದ ಮಮತಾ ಬ್ಯಾನರ್ಜಿ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ 24 ಗಂಟೆ ಕಳೆದಿಲ್ಲ, ಪತ್ರಗಳು, ಕೇಂದ್ರ ತಂಡವೊಂದು ಬರಲು ಆರಂಭಿಸಿದೆ. ಏಕೆಂದರೆ ಜನಸಾಮಾನ್ಯರ ಆದೇಶವನ್ನು ಬಿಜೆಪಿ ಇನ್ನೂ ಸಹಿಸಿಕೊಳ್ಳಲು ಆಗುತ್ತಿಲ್ಲ. ಜನಾದೇಶವನ್ನು ಒಪ್ಪಿಕೊಳ್ಳುವಂತೆ ಕಮಲ ನಾಯಕಲ್ಲಿ ಮನವಿ ಮಾಡಿದರು.

ಚುನಾವಣೆ ನಂತರದ ಹಿಂಸಾಚಾರದ ಕಾರಣವನ್ನು ಪರಿಶೀಲಿಸಲು ಕೇಂದ್ರ ಗೃಹ ಸಚಿವಾಲಯದ ನಾಲ್ವರು ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ತಂಡ ಗುರುವಾರ ಪಶ್ಚಿಮ ಬಂಗಾಳಕ್ಕೆ ಆಗಮಿಸಿದೆ. ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದ ತಂಡ ರಾಜ್ಯ ಸಚಿವಾಲಯಕ್ಕೆ ಭೇಟಿ ನೀಡಿದ್ದು, ಡಿಜಿಪಿ ಮತ್ತು ಗೃಹ ಕಾರ್ಯದರ್ಶಿಯೊಂದಿಗೆ ಸಭೆ ನಡೆಸಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com