ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒಂದು ವಾರಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ರಾಜಧಾನಿಯಲ್ಲಿ ಉಸಿರುಗಟ್ಟುವ ವಾತಾವರಣದ ಕಾರಣ ಜನರಿಗೆ ಸ್ವಲ್ಪ ರಿಲೀಫ್ ನೀಡುವ ಪ್ರಯತ್ನದಲ್ಲಿ, ಎಲ್ಲಾ ಶಾಲೆಗಳನ್ನು ಒಂದು ವಾರ ಮುಚ್ಚಲಾಗುವುದು, ನವೆಂಬರ್ 14 ರಿಂದ 17 ರ ನಡುವೆ ಎಲ್ಲಾ ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ಮತ್ತು ಎಲ್ಲಾ ಸರ್ಕಾರಿ ಕಚೇರಿಗಳನ್ನು ನಿಷೇಧಿಸಲಾಗುವುದು ಎಂದು ದೆಹಲಿ ಸರ್ಕಾರ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕ್ರಮಗಳು ರಸ್ತೆಗಳಲ್ಲಿ ವಾಹನಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಮಾಲಿನ್ಯಕ್ಕೆ ವಾಹನ ಮಾಲಿನ್ಯದ ಕೊಡುಗೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿವೆ. ನಿರ್ಮಾಣ ಚಟುವಟಿಕೆಗಳ ನಿಷೇಧವು ಧೂಳಿನ ಮಾಲಿನ್ಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಶಾಲೆಗಳನ್ನು ಮುಚ್ಚಲಾಗಿದ್ದರೂ, ವರ್ಚುವಲ್ ತರಗತಿಗಳು ಮುಂದುವರಿಯುತ್ತದೆ. ಇದರಿಂದ ವಿದ್ಯಾರ್ಥಿಗಳು ಯಾವುದೇ ಹೆಚ್ಚಿನ ಕಲಿಕೆಯ ನಷ್ಟವನ್ನು ಅನುಭವಿಸುವುದಿಲ್ಲ. ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳನ್ನು ದೀರ್ಘಕಾಲದವರೆಗೆ ಮುಚ್ಚಲಾಗಿದ್ದು, ವಿದ್ಯಾರ್ಥಿಗಳು ಈಗಾಗಲೇ ಕಲಿಕೆಯ ನಷ್ಟವನ್ನು ಅನುಭವಿಸಿದ್ದಾರೆ.
ಶನಿವಾರ ಸಂಜೆ ದೆಹಲಿ ಸಚಿವಾಲಯದಲ್ಲಿ ಸಚಿವರು ಮತ್ತು ಉನ್ನತ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ನಂತರ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡುವುದಿಲ್ಲ. ಆದರೆ ಸಂಕ್ಷಿಪ್ತ ಲಾಕ್ಡೌನ್ ಪರಿಗಣನೆಯಲ್ಲಿದೆ ಮತ್ತು ಸರ್ಕಾರವು ಅದರ ಬಗ್ಗೆ ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತಿದೆ ಎಂದು ಹೇಳಿದ್ದಾರೆ.
ದೆಹಲಿ ಸರ್ಕಾರವು ರಾಜಧಾನಿಗೆ ಬೀಗ ಹಾಕುವ ಕುರಿತು ಪ್ರಸ್ತಾವನೆಯನ್ನು ಸಿದ್ಧಪಡಿಸುತ್ತದೆ ಮತ್ತು ಅದನ್ನು ಸುಪ್ರೀಂ ಕೋರ್ಟ್ಗೆ ಪ್ರಸ್ತಾವನೆಯನ್ನು ಸಲ್ಲಿಸಲಿದೆ. ಇದು ತೀವ್ರವಾದ ಹೆಜ್ಜೆಯಾಗಿರುವುದರಿಂದ, ಈ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಕೇಂದ್ರ ಸರ್ಕಾರ ಸೇರಿದಂತೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳೊಂದಿಗೆ ಸಮಾಲೋಚಿಸಲಾಗುವುದು ಎಂದು ದೆಹಲಿ ಸಿಎಂ ತಿಳಿಸಿದ್ದಾರೆ.
ಗಾಳಿಯ ಗುಣಮಟ್ಟ ತೀರಾ ಹದಗೆಟ್ಟಿರುವ ರಾಜಧಾನಿಯಲ್ಲಿ ಅಗತ್ಯವಿದ್ದಲ್ಲಿ ಎರಡು ದಿನಗಳ ಲಾಕ್ಡೌನ್ ಹೇರಲು ಕೇಂದ್ರ ಮತ್ತು ದೆಹಲಿ ಸರ್ಕಾರ ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
Advertisement