ಓಮಿಕ್ರಾನ್ ಭೀತಿ ನಡುವೆ ಕಣ್ಗಾವಲು, ಪರೀಕ್ಷೆ ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ

ವಿಶ್ವದಾದ್ಯಂತ ಕೋವಿಡ್ ಹೊಸ ತಳಿ' ಓಮಿಕ್ರಾನ್ ಹರಡುವ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ನವದೆಹಲಿ: ವಿಶ್ವದಾದ್ಯಂತ ಕೋವಿಡ್ ಹೊಸ ತಳಿ' ಓಮಿಕ್ರಾನ್ ಹರಡುವ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. 

ಭಾನುವಾರ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಲಸಿಕೆ ನೀಡಿಕೆ ಪ್ರಕ್ರಿಯೆಯನ್ನು ಹೆಚ್ಚಿಸುವಂತೆ ಹಾಗೂ ಸೋಂಕು ಹರಡುವಿಕೆ ನಿಯಂತ್ರಣ ಕ್ರಮಗಳನ್ನು ತೀವ್ರಗೊಳಿಸುವಂತೆ ಸೂಚಿಸಿದ್ದಾರೆ. ಸೋಂಕು ಹರಡುವಿಕೆ ಕುರಿತು ಸೂಕ್ಷ್ಮ ನಿಗಾ ವಹಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ. 

ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೋವಿಡ್ ತಳಿ ಪತ್ತೆಯಾದ ನಂತರ ಜಗತ್ತಿನಾದ್ಯಂತ ವಿವಿಧ ರಾಷ್ಟ್ರಗಳಲ್ಲಿ ಪ್ರಕರಣಗಳು ವರದಿಯಾಗಿವೆ. ಕೋವಿಡ್ -19 ಲಸಿಕೆ ಓಮಿಕ್ರಾನ್ ತಳಿ ವಿರುದ್ಧ ಪರಿಣಾಮಕಾರಿಯೇ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶನಿವಾರ ಕೋವಿಡ್-19 ಪರಿಸ್ಥಿತಿ ಕುರಿತ ಪರಾಮರ್ಶನ ಸಭೆ ನಡೆದಿತ್ತು. 

ಭಾನುವಾರ ಬೆಳಗ್ಗೆ ವಿವಿಧ ತಜ್ಞರೊಂದಿಗೆ ತುರ್ತು ಸಭೆ ನಡೆಸಿದ ಕೇಂದ್ರ ಗೃಹ ಕಾರ್ಯದರ್ಶಿ, ಓಮಿಕ್ರಾನ್ ಹಿನ್ನೆಲೆಯಲ್ಲಿ ವಿಶ್ವದಾದ್ಯಂತ ಇರುವ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಿದರು. ದೇಶದೊಳಗೆ ಬರುವ ವಿದೇಶಿ ಪ್ರವಾಸಿಗರ ಮೇಲಿನ ನಿಗಾ ಹಾಗೂ ಪರೀಕ್ಷೆ ಕುರಿತ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಇದೀಗ ಪರಾಮರ್ಶೆ ನಡೆಸಿರುವುದಾಗಿ ಕೇಂದ್ರ ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com