ಸಂಸತ್
ಸಂಸತ್

ಸಂಸತ್ತಿನ ಎರಡೂ ಸದನಗಳಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆ ಅಂಗೀಕಾರ

ಮಳೆ, ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಕಳೆದ ಒಂದು ವರ್ಷದಿಂದ ನಡೆಸುತ್ತಿರುವ ರೈತರ ಪ್ರತಿಭಟನೆ ಕೊನೆಗೂ ಮಣಿದ ಕೇಂದ್ರ ಸರ್ಕಾರ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಸೋಮವಾರ...

ನವದೆಹಲಿ: ಮಳೆ, ಕೊರೆಯುವ ಚಳಿಯನ್ನೂ ಲೆಕ್ಕಿಸದೇ ಕಳೆದ ಒಂದು ವರ್ಷದಿಂದ ನಡೆಸುತ್ತಿರುವ ರೈತರ ಪ್ರತಿಭಟನೆ ಕೊನೆಗೂ ಮಣಿದ ಕೇಂದ್ರ ಸರ್ಕಾರ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಸೋಮವಾರ ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕರಿಸಿದೆ.

ಇಂದಿನಿಂದ ಸಂಸತ್ ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಲೋಕಸಭೆ ಕಲಾಪ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ಅನ್ನು ಅಂಗೀಕರಿಸಲಾಯಿತು.

ಮಧ್ಯಾಹ್ನ ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಕೃಷಿ ಕಾನೂನುಗಳ ರದ್ದತಿ ಮಸೂದೆ 2021 ಅನ್ನು ಮಂಡಿಸಿದರು.

ಮಸೂದೆ ಅಂಗೀಕರಿಸುವ ಮುನ್ನ ಉಪ ಸಭಾಪತಿ ಹರಿವಂಶ ಅವರು, ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎರಡು ನಿಮಿಷಗಳ ಕಾಲ ಮಾತನಾಡಲು ಅವಕಾಶ ನೀಡಿದರು.

ಇತ್ತೀಚಿನ ಉಪಚುನಾವಣೆಗಳ ಫಲಿತಾಂಶಗಳನ್ನು ಪರಿಶೀಲಿಸಿದ ನಂತರ ಮುಂಬರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದಿದೆ ಎಂದು ಖರ್ಗೆ ಹೇಳಿದರು.

ಈ ವಿವಾದಾತ್ಮಕ ಕಾನೂನುಗಳ ವಿರುದ್ಧ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಯುತ್ತಿದ್ದು, ಒಂದು ವರ್ಷದಲ್ಲಿ 700ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ ಬಗ್ಗೆಯೂ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಸ್ತಾಪಿಸಿದರು.

ಮಸೂದೆ ಮಂಡಿಸಿ ಮಾತನಾಡಿದ ತೋಮರ್ ಅವರು, ಮೂರು ಕಾನೂನುಗಳನ್ನು ರೈತರ ಅನುಕೂಲಕ್ಕಾಗಿ ತರಲಾಗಿದೆ. ಆದರೆ ಧರಣಿ ನಿರತ ರೈತರಿಗೆ ಈ ಕಾನೂನಿನ ಪ್ರಯೋಜನಗಳ ಬಗ್ಗೆ ಮನವರಿಕೆ ಮಾಡಿಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮತ್ತು ಟಿಎಂಸಿ ಸದಸ್ಯರ ಪ್ರತಿಭಟನೆಯ ನಡುವೆಯೇ ಧ್ವನಿ ಮತದ ಮೂಲಕ  ಕೃಷಿ ಕಾನೂನುಗಳ ರದ್ದತಿ ಮಸೂದೆ 2021  ಅಂಗೀಕರಿಸಲಾಯಿತು.

Related Stories

No stories found.

Advertisement

X
Kannada Prabha
www.kannadaprabha.com