ಲಖಿಂಪುರ್ ಖೇರಿ ಹಿಂಸಾಚಾರ: ಅಮಿತ್ ಶಾ ಭೇಟಿ ಮಾಡಿದ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಾಲ್ವರು ರೈತರನ್ನು ಕೊಲೆ ಮಾಡಿದ ಆರೋಪದ ಮೇಲೆ ತಮ್ಮ ಮಗನ ವಿರುದ್ಧ ಕೊಲೆ ಪ್ರಕರಣ ದಾಖಲಾದ ನಂತರ ಮೊದಲ ಬಾರಿಗೆ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರು ಬುಧವಾರ...
ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಮೃತದೇಹ
ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಮೃತದೇಹ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಾಲ್ವರು ರೈತರನ್ನು ಕೊಲೆ ಮಾಡಿದ ಆರೋಪದ ಮೇಲೆ ತಮ್ಮ ಮಗನ ವಿರುದ್ಧ ಕೊಲೆ ಪ್ರಕರಣ ದಾಖಲಾದ ನಂತರ ಮೊದಲ ಬಾರಿಗೆ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವರಾದ ಮಿಶ್ರಾ ಅವರು ಇಂದು ಬೆಳಗ್ಗೆ ನಾರ್ತ್ ಬ್ಲಾಕ್‌ನ ಮೊದಲ ಮಹಡಿಯಲ್ಲಿರುವ ತಮ್ಮ ಕಚೇರಿಗೆ ಆಗಮಿಸಿ ಸುಮಾರು ಅರ್ಧ ಗಂಟೆ ಇದ್ದರು. ಕೆಲವು ಅಧಿಕೃತ ಕೆಲಸಗಳನ್ನು ಮಾಡಿದ ನಂತರ ಮಿಶ್ರಾ ಅವರು ಅಮಿತ್ ಶಾ ಅವರ ನಿವಾಸಕ್ಕೆ ಭೇಟಿ ನೀಡಿದರು.

ಮಿಶ್ರಾ ಅವರು ತಮ್ಮ ತವರು ಜಿಲ್ಲೆ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕಳೆದ ಭಾನುವಾರ ನಡೆದ ಘಟನೆಯ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಹಲವರ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ರೈತರ ಮೇಲೆ ಹರಿಸಿದ ಕಾರಿನಲ್ಲಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿತ್ರಾ ಇದ್ದರು ಎಂದು ರೈತ ಸಂಘಗಳ ಆರೋಪಿಸಿವೆ. ಆದರೆ ಈ ಆರೋಪವನ್ನು ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರು ನಿರಾಕರಿಸಿದ್ದಾರೆ.

ಕಳೆದ ಭಾನುವಾರ ರಾತ್ರಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಅವರ ತಂದೆಯ ಊರು ಲಖೀಂಪುರ ಖೇರಿಯ ಟಿಕೂನಿಯಾ ಎಂಬಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ ಕೃಷಿ ಕಾಯ್ದೆ ವಿರೋಧಿಸಿ ರೈತರು ಒಟ್ಟುಗೂಡಿ ಪ್ರತಿಭಟನೆ ನಡೆಸುವ ಮೂಲಕ ಕಾರನ್ನು ತಡೆದಿದ್ದರು. ಈ ವೇಳೆ ಎರಡು ಕಾರು ಅವರ ಮೇಲೆ ಹರಿದು ಇಬ್ಬರು ರೈತರು ಮೃತಪಟ್ಟಿದ್ದರು. ಈ ಘಟನೆಯಿಂದ ಹಿಂಸಾಚಾರ ನಡೆದಿದ್ದು, ಇಲ್ಲಿಯವರೆಗೆ 8 ಮಂದಿ ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com