ಲಖನೌ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರನ್ನು ಮಂಗಳವಾರ ಎಸ್ಐಟಿ ಕ್ರೈಂ ಬ್ರಾಂಚ್ ಕಚೇರಿಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಿದೆ.
ನಾಲ್ವರು ರೈತರು ಸೇರಿದಂತೆ ಎಂಟು ಜನ ಸಾವನ್ನಪ್ಪಿದ ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಕಳೆದ ಶನಿವಾರ ರಾತ್ರಿ ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಅವರನ್ನು ಬಂಧಿಸಿದೆ.
12 ಗಂಟೆಗಳ ಸುದೀರ್ಘ ವಿಚಾರಣೆಯ ನಂತರ ಆಶಿಶ್ ಮಿಶ್ರಾ ಅವರನ್ನು ಬಂಧಿಸಲಾಗಿದ್ದು, ಈಗ ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದೆ.
ಇನ್ನೊಂದು ಬೆಳವಣಿಗೆಯಲ್ಲಿ, ಪ್ರಕರಣದ ಮತ್ತೊಬ್ಬ ಆರೋಪಿ, ಆಶಿಶ್ ಮಿಶ್ರಾ ಅವರ ಸಹವರ್ತಿ ಅಂಕಿತ್ ದಾಸ್ ಅವರು ಮಂಗಳವಾರ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಶರಣಾಗತಿ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಕೋರ್ಟ್ ಪೊಲೀಸ್ ಠಾಣೆಯಿಂದ ವರದಿ ಕೇಳಿದೆ.
ಅಂಕಿತ್ ದಾಸ್ ಅವರು ಮಾಜಿ ಕಾಂಗ್ರೆಸ್ ಸಂಸದ ದಿವಂಗತ ಅಖಿಲೇಶ್ ದಾಸ್ ಅವರ ಸಂಬಂಧಿಯಾಗಿದ್ದು, ಅಕ್ಟೋಬರ್ 3 ರಂದು ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಹರಿದ ವಾಹನಗಳಲ್ಲಿ ಅಂಕಿತ್ ದಾಸ್ ಅವರ ಕಾರು ಸಹ ಇದ್ದು, ತಲೆ ಮರೆಸಿಕೊಂಡಿರುವ ದಾಸ್ ಬಂಧನ ಉತ್ತರ ಪ್ರದೇಶ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
Advertisement