ಲಖಿಂಪುರ್ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾ, ಬಂಧನಕ್ಕೆ ಆಗ್ರಹಿಸಿ ರೈತರಿಂದ ನಾಳೆ 'ರೈಲು ರೋಕೋ'
ನವದೆಹಲಿ: ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಬಂಧಿಸಬೇಕು ಎಂದು ಒತ್ತಾಯಿಸಿ ಸೋಮವಾರ 'ರೈಲ್ ರೋಕೋ' ನಡೆಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್ಕೆಎಂ) ಭಾನುವಾರ ಹೇಳಿದೆ.
ಲಖಿಂಪುರ್ ಖೇರಿ ಪ್ರಕರಣದಲ್ಲಿ ನ್ಯಾಯ ಸಿಗುವವರೆಗೂ ಪ್ರತಿಭಟನೆಗಳನ್ನು ತೀವ್ರಗೊಳಿಸಲಾಗುವುದು ಎಂದು
ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ರೈತ ಸಂಘಗಳ ಪ್ರತಿಭಟನೆಯ ನೇತೃತ್ವ ವಹಿಸಿರುವ ಎಸ್ ಕೆಎಂ ಪ್ರಕಟಣೆಯಲ್ಲಿ ತಿಳಿಸಿದೆ.
ನಾಳೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಲ್ಲಾ ರೈಲು ಸಂಚಾರವನ್ನು ಆರು ಗಂಟೆಗಳ ಕಾಲ ತಡೆಯುವ ಮೂಲಕ 'ರೈಲು ರೋಕೋ' ನಡೆಸಲಾಗುವುದು ಎಂದು ಎಸ್ ಕೆಎಂ ಹೇಳಿದೆ.
ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ನ್ಯಾಯ ದೊರೆಯಬೇಕು ಎಂದರೆ ಕೇಂದ್ರ ಗೃಹ ಖಾತೆ ರಾಜ್ಯ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಮತ್ತು ತಕ್ಷಣ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ರೈಲು ರೋಕೋ ಘೋಷಿಸಿದೆ.