ಪ್ರಕಾಶಂ: ಮಂತ್ರವಾದಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಆರೋಪಿಯನ್ನು ಹೊಡೆದು ಕೊಲೆಗೈದಿರುವ ಘಟನೆ ಭಾನುವಾರ ತಡರಾತ್ರಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಜರುಗುಮಲ್ಲೆ ಪೊಲೀಸ್ ಠಾಣಾ ವ್ಯಾಪ್ತಿಯ ಕಣೆಪಲ್ಲೆ ಗ್ರಾಮದಲ್ಲಿ ನಡೆದಿದೆ.
42 ವರ್ಷದ ಮಹಿಳೆ ವಿಜಯಮ್ಮ ಮೇಲೆ 60 ವರ್ಷದ ಓಬಯ್ಯ ಎಂಬ ಮಂತ್ರವಾದಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆಂಬ ಆರೋಪ ಕೇಳಿಬಂದಿತ್ತು. ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆದೊಯ್ಯುವಾಗ, ಗ್ರಾಮಸ್ಥರು ಆತನ ಮೇಲೆ ಹಲ್ಲೆ ಮಾಡುತ್ತಾರೆ. ಇದನ್ನು ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಜಿಯಾ ಸುಲ್ತಾನ್ ಬೇಗಂ ಅವರು ತಡೆಯಲು ಯತ್ನಿಸಿದ್ರೂ ವಿಫಲವಾಗಿದ್ದಾರೆ.
ಮಹಿಳೆಯೂ ಮೊಣಕಾಲು ನೋವಿನಿಂದ ಬಳಲುತಿದ್ದು, ಅದಕ್ಕೆ ಔಷಧಿ ನೀಡುವುದಾಗಿ ಹೇಳಿ ಮಂತ್ರವಾದಿ ಮನೆಗೆ ಕರೆಸಿಕೊಂಡಿದ್ದಾನೆ. ಈ ವೇಳೆ ಆಕೆಯ ಮೇಲೆ ಅತ್ಯಾಚಾರವೆಸಗಲು ಮುಂದಾಗಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ. ನಂತರ ಆಕೆಯ ಕಾಲು, ಕೈ ಕಟ್ಟಿಹಾಕಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಾದ ಬಳಿಕ ಕೊಡಲಿಯಿಂದ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ವಿಜಯಮ್ಮ ಮತ್ತು ಓಬಯ್ಯ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಎರಡು ಪ್ರತ್ಯೇಕ ಕೊಲೆ ಪ್ರಕರಣಗಳನ್ನು ದಾಖಲಿಸಿದ್ದಾರೆ. ಆರೋಪಿಗಳನ್ನು ಗುರುತಿಸಿ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು ಎಂದು ಅವರು ಹೇಳಿದ್ದಾರೆ.
Advertisement