ನವದೆಹಲಿ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ತರುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ಕೋವಿಡ್ ಮುನ್ನೆಚ್ಚರಿಕೆ ಡೋಸ್ ಲಸಿಕೆ ಅಭಿಯಾನ ಮುಗಿದ ನಂತರ ಸಿಎಎಗೆ ಸಂಬಂಧಿಸಿದ ನಿಯಮಗಳನ್ನು ರೂಪಿಸಲಾಗುವುದು ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.
ಅಮಿತ್ ಶಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಶ್ಚಿಮ ಬಂಗಾಳ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಇಂದು ಅಮಿತ್ ಶಾ ಅವರನ್ನು ಭೇಟಿ ಮಾಡಿದೇನೆ. ಭೇಟಿ ವೇಳೆ ಅವರು ಸಿಎಎ ಜಾರಿಗೆ ತರುವ ಬಗ್ಗೆ ಭರವಸೆ ನೀಡಿದ್ದಾರೆ ಎಂದರು.
ಇದೇ ವೇಳೆ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಬಂಧಿಸಿರುವ ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಸುಮಾರು 100 ತೃಣಮೂಲ ಕಾಂಗ್ರೆಸ್ ನಾಯಕರ ಪಟ್ಟಿಯನ್ನು ಸಹ ಅವರಿಗೆ ನೀಡಿದ್ದೇನೆ ಎಂದು ಸುವೇಂದು ಅಧಿಕಾರಿ ತಿಳಿಸಿದರು.
ಕೇಂದ್ರ ಸರ್ಕಾರ ಕಳೆದ ಏಪ್ರಿಲ್ ತಿಂಗಳಿನಲ್ಲಿ ಜನರಿಗೆ ಬೂಸ್ಟರ್ ಡೋಸ್ ನೀಡಲು ಪ್ರಾರಂಭಿಸಿದೆ. ಇದು 9 ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ಕಾರ್ಯ ಮುಗಿದ ಬಳಿಕ ಸಿಎಎ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಕೇಂದ್ರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುವೇಂದು, ಅಮಿತ್ ಶಾ ಅವರನ್ನು ಸಂಸತ್ತಿನ ಅವರ ಕಚೇರಿಯಲ್ಲಿ ಭೇಟಿ ಮಾಡಿದ್ದು, ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿ, ಶಿಕ್ಷಕರ ನೇಮಕಾತಿ ಹಗರಣದಂತಹ ಭ್ರಷ್ಟ ಚಟುವಟಿಕೆಗಳಲ್ಲಿ ಬಂಗಾಳ ಸರ್ಕಾರ ಮುಳುಗಿರುವ ಬಗ್ಗೆ ನಾನು ಅವರಿಗೆ ವಿವರಿಸಿದ್ದೇನೆ. ಅಲ್ಲದೆ ಆದಷ್ಟು ಬೇಗ ಸಿಎಎ ಜಾರಿಗೆ ತರುವಂತೆ ಅಮಿತ್ ಶಾಗೆ ಮನವಿ ಮಾಡಿರುವುದಾಗಿ ಹೇಳಿದ್ದಾರೆ.
Advertisement