ಬಾಬ್ರಿ ಮಸೀದಿ ಧ್ವಂಸ ಪ್ರಕರಣ: 32 ಆರೋಪಿಗಳ ಖುಲಾಸೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಐಎಂಪಿಎಲ್‌ಬಿ

1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿರುವುದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದೆ ಎಂದು ಮಂಡಳಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಬಾಬ್ರಿ ಮಸೀದಿ
ಬಾಬ್ರಿ ಮಸೀದಿ
Updated on

ಅಯೋಧ್ಯೆ: 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿರುವುದರ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದೆ ಎಂದು ಮಂಡಳಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಸಿಬಿಐ ನ್ಯಾಯಾಲಯವು 2020ರ ಸೆಪ್ಟೆಂಬರ್ 30 ರಂದು ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಸೇರಿದಂತೆ 32 ಆರೋಪಿಗಳನ್ನು ಖುಲಾಸೆಗೊಳಿಸಿತ್ತು, ನಂತರ ಇಬ್ಬರು ಅಯೋಧ್ಯೆ ನಿವಾಸಿಗಳಾದ ಹಾಜಿ ಮಹಬೂಬ್ ಮತ್ತು ಸೈಯದ್ ಅಖ್ಲಾಕ್ ಅವರು ಅಲಹಾಬಾದ್ ಹೈಕೋರ್ಟ್‌ಗೆ ಪರಿಷ್ಕರಣೆ ಅರ್ಜಿಯನ್ನು ಸಲ್ಲಿಸಿದ್ದರು.

ಹೈಕೋರ್ಟ್‌ನ ದ್ವಿಸದಸ್ಯ ಪೀಠವು ಈ ವರ್ಷ ನವೆಂಬರ್ 9 ರಂದು ಪರಿಷ್ಕರಣೆ ಅರ್ಜಿಯನ್ನು ತಿರಸ್ಕರಿಸಿತು, ಮೇಲ್ಮನವಿದಾರರು ಪ್ರಕರಣದ ಸಂತ್ರಸ್ತರಲ್ಲದ ಕಾರಣ ತೀರ್ಪನ್ನು ಪ್ರಶ್ನಿಸಲು ಯಾವುದೇ ಅಧಿಕಾರವಿಲ್ಲ ಎಂದು ಹೇಳಿತ್ತು.

ಎಐಎಂಪಿಎಲ್‌ಬಿ ಕಾರ್ಯಕಾರಿ ಸದಸ್ಯ ಮತ್ತು ವಕ್ತಾರ ಸೈಯದ್ ಖಾಸಿಲ್ ರಸೂಲ್ ಇಲ್ಯಾಸ್, ನಿರ್ದೋಷಿಗಳ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗಲು ಮಂಡಳಿ ನಿರ್ಧರಿಸಿದೆ ಎಂದು ಹೇಳಿದರು.

ಅಯೋಧ್ಯೆಯ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಬಾಬ್ರಿ ಮಸೀದಿ ಧ್ವಂಸವನ್ನು ಕ್ರಿಮಿನಲ್ ಕೃತ್ಯ ಎಂದು ಒಪ್ಪಿಕೊಂಡಿರುವುದರಿಂದ ನಾವು ಖಂಡಿತವಾಗಿಯೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿದ್ದೇವೆ ಎಂದು ಅವರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಅಯೋಧ್ಯೆಗೆ ಸಂಬಂಧಿಸಿದ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಪೀಠವು, ಬಾಬ್ರಿ ಮಸೀದಿ ಧ್ವಂಸವು ಕಾನೂನಿನ ಗಂಭೀರ ಉಲ್ಲಂಧನೆಯಾಗಿದೆ ಮತ್ತು ಆರೋಪಿಗಳು ಇನ್ನೂ ಕಾನೂನಿನ ವ್ಯಾಪ್ತಿಯಿಂದ ಹೊರಗಿದ್ದಾರೆ ಎಂದು ಹೇಳಿದ್ದರು.

ಮೇಲ್ಮನವಿದಾರರಾದ ಹಾಜಿ ಮಹಬೂಬ್ ಮತ್ತು ಸೈಯದ್ ಅಖ್ಲಾಕ್ ಅವರು ಸಿಬಿಐ ಸಾಕ್ಷಿಗಳಾಗಿದ್ದು, ಅವರ ಮನೆಗಳನ್ನು 1992 ರ ಡಿಸೆಂಬರ್ 6 ರಂದು ಆರೋಪಿಗಳು ಒಟ್ಟುಗೂಡಿಸಿದ ಗುಂಪೊಂದು ದಾಳಿ ಮಾಡಿ ಸುಟ್ಟು ಹಾಕಿತ್ತು. ಮಹಬೂಬ್ ಮತ್ತು ಅಖ್ಲಾಕ್ ಬಾಬ್ರಿ ಮಸೀದಿಯ ಸಮೀಪದಲ್ಲಿ ವಾಸಿಸುತ್ತಿದ್ದರು ಎಂದು ಅವರು ಹೇಳಿದರು.

ಸಿಬಿಐ ನ್ಯಾಯಾಲಯದ ತೀರ್ಪಿನ ವಿರುದ್ಧ ಮಹಬೂಬ್ ಮತ್ತು ಅಖ್ಲಾಕ್ 2021ರ ಜನವರಿ 8 ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯಲ್ಲಿ ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿತ್ತು.

16ನೇ ಶತಮಾನದಲ್ಲಿ ಸ್ಥಾಪಿಸಲಾಗಿದ್ದ ಬಾಬ್ರಿ ಮಸೀದಿಯನ್ನು 1992ರ ಡಿಸೆಂಬರ್‌ 6ರಂದು ಧ್ವಂಸಗೊಳಿಸಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ್ದ ಸಾಂವಿಧಾನಿಕ ಪೀಠವು ವಿವಾದಿತ ಸ್ಥಳದಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಅನುಮತಿ ನೀಡಿತ್ತು. ಮಸೀದಿ ನಿರ್ಮಾಣಕ್ಕಾಗಿ ಸುನ್ನಿ ವಕ್ಫ್‌ ಮಂಡಳಿಗೆ 5 ಎಕರೆ ಭೂಮಿ ಮಂಜೂರು ಮಾಡುವಂತೆಯೂ 2019ರ ನವೆಂಬರ್‌ 9ರಂದು ನೀಡಿದ್ದ ತೀರ್ಪಿನಲ್ಲಿ ತಿಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com