ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ 2020 ರಿಂದ ಇಲ್ಲಿಯವರೆಗೆ ಒಂಬತ್ತು ಕಾಶ್ಮೀರಿ ಪಂಡಿತರನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.
2020 ರಲ್ಲಿ ಒಬ್ಬರು ಹಾಗೂ 2022ರಲ್ಲಿ ನಾಲ್ವರು ಕಾಶ್ಮೀರಿ ಪಂಡಿತರು ಸೇರಿದಂತೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು 9 ಕಾಶ್ಮೀರಿ ಪಂಡಿತರನ್ನು ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ಉಗ್ರರಿಂದ ಹತ್ಯೆಯಾದವರಲ್ಲಿ ಕಾಶ್ಮೀರಿ ರಜಪೂತ ಸಮುದಾಯಕ್ಕೆ ಸೇರಿದ ವ್ಯಕ್ತಿಯೂ ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ರೈ, ಕಳೆದ ಮೂರು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಗಾಗಿ ಕೇಂದ್ರ ಗೃಹ ಸಚಿವಾಲಯ ಸುಮಾರು 2,815 ಕೋಟಿ ರೂ. ಖರ್ಚು ಮಾಡಿದೆ ಎಂದು ಉತ್ತರಿಸಿದ್ದಾರೆ.
2019-20ರಲ್ಲಿ 1,267 ಕೋಟಿ, 2020-21ರಲ್ಲಿ 611 ಕೋಟಿ ರೂ. ಮತ್ತು 2021-22ರಲ್ಲಿ 936.095 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Advertisement