ರೈಲ್ವೇ ಆಸ್ತಿಗಳಿಗೆ ಹಾನಿಯಾಗದಂತೆ ತಡೆಯಲು ಕಠಿಣ ಕಾನೂನು ಜಾರಿಗೆ ತರಲಾಗುವುದು: ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

4 ವರ್ಷದ ಅವಧಿಗೆ ಯೋಧರನ್ನು ನೇಕಮ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಗಳನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆ ವೇಳೆ ರೈಲ್ವೇಗೆ ಸೇರಿದ ಆಸ್ತಿಗಳಿಗೆ ಭಾರೀ ಹಾನಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ರೈಲ್ವೇ ಆಸ್ತಿಗಳಿಗೆ ಹಾನಿಯಾಗದಂತೆ ತಡೆಯಲು ಕಾಯ್ದೆಗಳ ಬಲಪಡಿಸುವುದಾಗಿ ಕೇಂದ್ರ...
ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
Updated on

ನವದೆಹಲಿ: 4 ವರ್ಷದ ಅವಧಿಗೆ ಯೋಧರನ್ನು ನೇಕಮ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಗಳನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆ ವೇಳೆ ರೈಲ್ವೇಗೆ ಸೇರಿದ ಆಸ್ತಿಗಳಿಗೆ ಭಾರೀ ಹಾನಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ರೈಲ್ವೇ ಆಸ್ತಿಗಳಿಗೆ ಹಾನಿಯಾಗದಂತೆ ತಡೆಯಲು ಕಾಯ್ದೆಗಳ ಬಲಪಡಿಸುವುದಾಗಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ. 

ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪ್ರತಿಭಟನೆ ವೇಳೆ ರೈಲ್ವೇ ಆಸ್ತಿಪಾಸ್ತಿಗಳಿಗೆ ಹಾನಿ ಮಾಡದಂತೆ ಪ್ರತಿಭಟನಾಕಾರರಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ, ರೈಲ್ವೆ ಕಾಯ್ದೆಯನ್ನು ಬಲಪಡಿಸಲು ಮತ್ತು ರೈಲ್ವೆ ಆಸ್ತಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಶೀಘ್ರದಲ್ಲೇ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. 

ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಮೋದಿ ಸರ್ಕಾರ ಪ್ರತಿಭಟನಾಕಾರರ ಸಮಸ್ಯೆಗಳನ್ನು ಸಂಪೂರ್ಣ ಸೂಕ್ಷ್ಮತೆಯಿಂದ ಆಲಿಸುತ್ತಿದೆ. ಪ್ರತಿಭಟನೆಯಿಂದ ರೈಲ್ವೇ ಆಸ್ತಿಪಾಸ್ತಿಗಳಿಗೆ ಸಾಕಷ್ಟು ಹಾನಿಯುಂಟಾಗಿದ್ದು, ರೈಲ್ವೆ ಕಾಯಿದೆಯನ್ನು ಮತ್ತಷ್ಟು ಬಲಪಡಿಸುವುದು ಅಗತ್ಯವಾಗಿದೆ. ರೈಲ್ವೆ ಆಸ್ತಿಯನ್ನು ರಕ್ಷಿಸಲು ಕ್ರಮ ತೆಗೆದುಕೊಳ್ಳುತ್ತೇವೆ" ಎಂದು ತಿಳಿಸಿದರು, 

ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಯನ್ನು ಧ್ವಂಸಗೊಳಿಸುವುದು ಮತ್ತು ರೈಲು ಸೇವೆಗಳನ್ನು ಅಡ್ಡಿಪಡಿಸುವುದರಿಂದ ಯಾವುದೇ ಪರಿಹಾರಗಳೂ ಸಿಗುವುದಿಲ್ಲ. ಅಸ್ತಿತ್ವದಲ್ಲಿರುವ ಕಾನೂನಿನ ಪ್ರಕಾರ, ರೈಲ್ವೆ ಆಸ್ತಿಯನ್ನು ಹಾನಿ ಮಾಡುವ ಯಾವುದೇ ವ್ಯಕ್ತಿಗೆ ಭಾರತೀಯ ರೈಲ್ವೇ ಕಾಯಿದೆಯ ಸೆಕ್ಷನ್ 151 ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾಯ್ದೆ ಅಡಿಯಲ್ಲಿ ವ್ಯಕ್ತಿಗೆ ಗರಿಷ್ಠ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಭಾರತದಲ್ಲಿ ಯಾವುದೇ ಪ್ರತಿಭಟನೆ ನಡೆದರೂ ಜನರು ಮೊದಲು ರೈಲುಗಳು ಹಾಗೂ ಬಸ್ಸುಗಳನ್ನು ಗುರಿ ಮಾಡುತ್ತಾರೆ. ಪ್ರತಿಭಟನೆ ವೇಳೆ ರೈಲುಗಳ ಹಲವಾರು ಬೋಗಿಗಳನ್ನು, ಎಂಜಿನ್ ಗಳನ್ನು ಸುಟ್ಟು ಹಾಕಲಾಗುತ್ತಿದೆ. ಇದರಿಂದ ರೈಲ್ವೇ ಇಲಾಖೆಗೆ ರೂ.200 ಕೋಟಿಗೂ ಹೆಚ್ಚು ಹಾನಿಯುಂಟಾಗುತ್ತಿದೆ. ನೂರಾರು ರೈಲುಗಳು ಅಸ್ತವ್ಯಸ್ತಗೊಂಡಿದ್ದರಿಂದ ಟಿಕೆಟ್ ಬುಕ್ಕಿಂಗ್‌ನಲ್ಲೂ ಸಾಕಷ್ಟು ನಷ್ಟವಾಗುತ್ತಿದೆ. “ಹಿಂಸಾತ್ಮಕ ಆಂದೋಲನದಿಂದಾಗಿ ಕಳೆದ ಮೂರು ದಿನಗಳಲ್ಲಿ 210 ಮೇಲ್ ಮತ್ತು 150 ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಲಾಗಿದೆ. ಇದಲ್ಲದೆ, 371 ರೈಲುಗಳ ಮೇಲೆ ಪರಿಣಾಮ ಬಿದ್ದಿದೆ. ಒಂದು ಡಜನ್‌ಗೂ ಹೆಚ್ಚು ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ ಮತ್ತು 100 ರೈಲುಗಳನ್ನು ಭಾಗಶಃ ನಿಲ್ಲಿಸಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರತಿಭಟನೆಯಿಂದಾಗಿ ಶುಕ್ರವಾರದವರೆಗೆ 10 ರೈಲುಗಳಿಗೆ ಬೆಂಕಿ ಹಚ್ಚಲಾಗಿದ್ದು, ದೇಶದ ವಿವಿಧ ಭಾಗಗಳಲ್ಲಿ 40 ಕ್ಕೂ ಹೆಚ್ಚು ಬೋಗಿಗಳಿಗೆ ಬೆಂಕಿ ಹಚ್ಚಲಾಗಿದೆ. ಬಿಹಾರ ರಾಜ್ಯದಲ್ಲಿಯೇ ಗರಿಷ್ಠ ಪ್ರಕರಣಗಳು ವರದಿಯಾಗಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com