ಚುನಾವಣೆಗೂ ಮುನ್ನ ಬಿಜೆಪಿ ತೊರೆದ ಗುಜರಾತ್ ಮಾಜಿ ಸಚಿವ ಜಯನಾರಾಯಣ ವ್ಯಾಸ್
ಅಹಮದಾಬಾದ್: ಗುಜರಾತ್ ಮಾಜಿ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಜಯನಾರಾಯಣ ವ್ಯಾಸ್ ಅವರು ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ವೈಯಕ್ತಿಕ ಕಾರಣಗಳನ್ನು ನೀಡಿ ಶನಿವಾರ ಆಡಳಿತ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಗುಜರಾತ್ ಕಾಂಗ್ರೆಸ್ ನಾಯಕರೊಬ್ಬರು ವ್ಯಾಸ್ ಅವರು ದೇಶದ ಅತ್ಯಂತ ಹಳೆಯ ಪಕ್ಷವನ್ನು ಸೇರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಆದರೆ, ವ್ಯಾಸ್ ಇದುವರೆಗೂ ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
75 ವರ್ಷದ ವ್ಯಾಸ್ ಅವರು ಇತ್ತೀಚೆಗೆ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದರು ಎಂದು ಕಾಂಗ್ರೆಸ್ ನಾಯಕ ತಿಳಿಸಿದ್ದಾರೆ.
ವ್ಯಾಸ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಕಳೆದ ಮೂರು ದಶಕಗಳಿಂದ ಬಿಜೆಪಿಯ ಸಿದ್ಧಾಂತದಂತೆ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದೇನೆ. ಈಗ ವೈಯಕ್ತಿಕ ಕಾರಣಗಳಿಗಾಗಿ ಇಂದು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ವ್ಯಾಸ್ ಅವರು ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಸಚಿವರಾಗಿದ್ದರು. ಆದಾಗ್ಯೂ, ಅವರು 2012 ಮತ್ತು 2017 ರ ವಿಧಾನಸಭಾ ಚುನಾವಣೆಯಲ್ಲಿ ಸಿಧ್ಪುರದಿಂದ ಸೋತಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ