ಶೋಪಿಯಾನ್‌ ಎನ್‌ಕೌಂಟರ್‌: ಜೆಇಎಂ ಸಂಘಟನೆಯ 2 ಭಯೋತ್ಪಾದಕರ ಹೊಡೆದುರುಳಿಸಿದ ಭಾರತೀಯ ಸೇನೆ!

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಗೆ ಸೇರಿದ ಇಬ್ಬರು ವಿದೇಶಿ ಭಯೋತ್ಪಾದಕರನ್ನು ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿದ್ದಾರೆ.
ಎನ್ ಕೌಂಟರ್
ಎನ್ ಕೌಂಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಗೆ ಸೇರಿದ ಇಬ್ಬರು ವಿದೇಶಿ ಭಯೋತ್ಪಾದಕರನ್ನು ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿದ್ದಾರೆ.

ಶೋಪಿಯಾನ್‌ನ ಕಪ್ರೆನ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿ ಕುರಿತು ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ  ಸೇನೆ ಮತ್ತು ಪೊಲೀಸರು ಘಟನಾ ಪ್ರದೇಶವನ್ನು ಸುತ್ತುವರೆದು ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

"ಯಾವುದೇ ನಾಗರಿಕ ಸಾವುನೋವು ಅಥವಾ ಗಾಯಗಳನ್ನು ತಪ್ಪಿಸಲು, ಪಡೆಗಳ ಜಂಟಿ ತಂಡವು ಹತ್ತಿರದ ಮದ್ರಸಾದಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಬಳಿಕ ಉಗ್ರರಿದ್ದ ಸ್ಥಳವನ್ನು ಸೇನೆ ಸುತ್ತುವರೆಯುತ್ತಿದ್ದತೆಂಯೇ ಅಡಗಿಕೊಂಡಿದ್ದ ಉಗ್ರರು ಏಕಾಏಕಿ ಗುಂಡಿನ ಸುರಿಮಳೆ ಗರೆದಿದ್ದಾರೆ. ಈ ವೇಳೆ ಸೈನಿಕರು ಪ್ರತಿದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಮೃತ ಉಗ್ರರನ್ನು  ಕಮ್ರಾನ್ ಭಾಯಿ ಅಲಿಯಾಸ್ ಹನೀಸ್ ಎಂದು ಗುರುತಿಸಲಾಗಿದ್ದು, ಮತ್ತೋರ್ವ ಉಗ್ರ ವಿದೇಶಿಗನಾಗಿದ್ದ ಎಂದು ಸೇನಾ ಮೂಲಗಳು ತಿಳಿಸಿವೆ. ಇಬ್ಬರೂ ನಿಷೇಧಿತ ಭಯೋತ್ಪಾದಕ ಸಂಘಟನೆ ಜೆಇಎಂನೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಪೊಲೀಸ್ ದಾಖಲೆಗಳ ಪ್ರಕಾರ, ಕೊಲ್ಲಲ್ಪಟ್ಟ ಭಯೋತ್ಪಾದಕನನ್ನು ಅಲ್ಟ್ರಾ ಎಂದು ವರ್ಗೀಕರಿಸಲಾಗಿದೆ ಮತ್ತು ಪೊಲೀಸರು ಮತ್ತು ನಾಗರಿಕರ ಮೇಲಿನ ದಾಳಿ ಸೇರಿದಂತೆ ಹಲವಾರು ಭಯೋತ್ಪಾದಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತ ಕುಲ್ಗಾಮ್-ಶೋಪಿಯಾನ್ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಮತ್ತು ಭಯೋತ್ಪಾದಕ ದಾಳಿಗಳನ್ನು ಕಾರ್ಯಗತಗೊಳಿಸಲು ಯೋಜಿಸುವುದರ ಜೊತೆಗೆ ಯುವಕರನ್ನು ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ನೇಮಕಾತಿ ಮತ್ತು ಪ್ರೇರೇಪಿಸುತ್ತಿದ್ದ. ಈ ಪ್ರದೇಶಗಳಲ್ಲಿ ಜೆಇಎಂ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಶಾಖೆಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದ ಎಂದು ವಕ್ತಾರರು ಹೇಳಿದ್ದಾರೆ.

ಹತರಾದ ಉಗ್ರರು ಕಣಿವೆ ರಾಜ್ಯದಲ್ಲಿ ದೊಡ್ಡಮಟ್ಟದ ವಿಧ್ವಂಸಕ್ಕೆ ಯೋಜನೆ ರೂಪಿಸಿದ್ದರು. ಆದರೆ ಈ ಎನ್ಕೌಂಟರ್ ಮೂಲಕ ಆ ಯೋಜನೆ ವಿಫಲವಾಗಿದೆ ಎನ್ನಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com