ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಹಲವು ಪಿಸಿಸಿಗಳಿಂದ ಮಲ್ಲಿಕಾರ್ಜುನ ಖರ್ಗೆಗೆ ಬಹಿರಂಗ ಬೆಂಬಲ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೂ ಮುನ್ನ ಪಕ್ಷದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಹಲವು ಪ್ರದೇಶ ಕಾಂಗ್ರೆಸ್ ಸಮಿತಿಗಳು(ಪಿಸಿಸಿ) ಶಶಿ ತರೂರ್ ಅವರ ವಿರುದ್ಧ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಬಲ ಘೋಷಿಸಿವೆ. 
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Updated on

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೂ ಮುನ್ನ ಪಕ್ಷದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಹಲವು ಪ್ರದೇಶ ಕಾಂಗ್ರೆಸ್ ಸಮಿತಿಗಳು(ಪಿಸಿಸಿ) ಶಶಿ ತರೂರ್ ಅವರ ವಿರುದ್ಧ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಬಲ ಘೋಷಿಸಿವೆ. 

ತಿರುವನಂತಪುರಂ ಸಂಸದ ಶಶಿ ತರೂರ್ ಅವರು ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಹಿರಿಯ ನಾಯಕರ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕಣಕ್ಕಿಳಿದಿದ್ದು, ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದೆ.

ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರವು, ಪಕ್ಷದ ಯಾವುದೇ ಪದಾಧಿಕಾರಿಗಳು ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಪ್ರಚಾರ ಮಾಡದಂತೆ ಮಾರ್ಗಸೂಚಿಗಳನ್ನು ಹೊರಡಿಸಿದ್ದರೂ, ತೆಲಂಗಾಣ ಮತ್ತು ಕೇರಳದ ಪಿಸಿಸಿಗಳು ಖರ್ಗೆ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿವೆ.

ಸೋಮವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಸಿಇಸಿ, ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಬಯಸುವವರು ತಮ್ಮ ಸಾಂಸ್ಥಿಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದೆ.

ತೆಲಂಗಾಣ ಪಿಸಿಸಿ ಸೋಮವಾರ ತರೂರ್ ಅವರನ್ನು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಒತ್ತಾಯಿಸಿದರೆ, ಕರ್ನಾಟಕ ಪಿಸಿಸಿ ನಾಯಕರು ಖರ್ಗೆ ಅವರ ಉಮೇದುವಾರಿಕೆಗೆ ಬೆಂಬಲ ನೀಡಿದ್ದಾರೆ. 

ಈ ಕುರಿತು ಇಂಡಿಯನ್ ಎಕ್ರ್ ಪ್ರೆಸ್ ಜೊತೆ ಮಾತನಾಡಿದ ಅಸ್ಸಾಂನ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು, ಖರ್ಗೆ ಅವರಿಗೆ ಮತ ಹಾಕುವಂತೆ ಹೈಕಮಾಂಡ್‌ನಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲವಾದರೂ, ಮೇಲಿನಿಂದ ಬಂದ ಸಂಕೇತಗಳು ಅವರ ಆದ್ಯತೆಯನ್ನು ಸೂಚಿಸುತ್ತವೆ ಎಂದು ಹೇಳಿದ್ದಾರೆ.

ನಮ್ಮ ಬಹುತೇಕ ಪ್ರತಿನಿಧಿಗಳು ಖರ್ಗೆ ಅವರು ಹೈಕಮಾಂಡ್‌ನ ಆಯ್ಕೆ ಎಂದು ತಿಳಿದಿರುವುದರಿಂದ ಅವರಿಗೆ ಬೆಂಬಲ ನೀಡುತ್ತಿದ್ದಾರೆ. ನಾಮಪತ್ರ ಸಲ್ಲಿಸಿದ ದಿನದಂದು ಹಿರಿಯ ನಾಯಕರು ಅವರ ಸುತ್ತ ಒಟ್ಟುಗೂಡಿದ ರೀತಿಯಿಂದ ಇದು ಸ್ಪಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇನ್ನು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ತರೂರ್ ಮನವೊಲಿಸುವಂತೆ ರಾಹುಲ್ ಗಾಂಧಿ ಅವರಿಗೆ ಕೇಳಿಕೊಳ್ಳಲಾಗಿದೆ ಎಂದು ತರೂರ್ ಬಹಿರಂಗಪಡಿಸಿದ್ದಾರೆ.

“ಕೆಲವು ಪಕ್ಷದ ನಾಯಕರು ನನ್ನ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮನವೊಲಿಸಲು ಕೇಳಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ನನಗೆ ಹೇಳಿದರು. ಆದರೆ ಅವರು ಹಾಗೆ ಮಾಡಲು ನಿರಾಕರಿಸಿದರು. ನಾನು ಚುನಾವಣೆಗೆ ಸ್ಪರ್ಧಿಸಬೇಕು ಎಂದರು. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಬೇಕು ಎಂದು 10 ವರ್ಷಗಳಿಂದ ಹೇಳುತ್ತಾ ಬಂದಿದ್ದನ್ನು ನಾನು ಅವರಿಗೆ ನೆನಪಿಸಿದ’’ ಎಂದು ಕೇರಳದಲ್ಲಿ ಚುನಾವಣಾ ಪ್ರಚಾರದಲ್ಲಿರುವ ತರೂರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com