ಗುರುಗ್ರಾಮ: ಇಲ್ಲಿನ ಹಳ್ಳಿಯೊಂದರಲ್ಲಿ ಮನೆಯೊಂದರ ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುವ ವೇಳೆ ಪೌರಕಾರ್ಮಿಕ ಮತ್ತು ಮತ್ತೊಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರ ಎಂದು ಪೊಲೀಸರು ತಿಳಿಸಿದ್ದಾರೆ.
'ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ಇಬ್ಬರು ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದಿದ್ದರು. ಈ ವೇಳೆ ವಿಷಕಾರಿ ಅನಿಲವನ್ನು ಉಸಿರಾಡಿದ ನಂತರ ಉಸಿರುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ವೇಳೆಗಾಗಲೇ ಅವರಿಬ್ಬರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೊಹಮ್ಮದ್ಪುರ ಜರ್ಸಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಆಗ್ರಾದ ದಿಲೀಪ್ (45) ಮತ್ತು ಸ್ಥಳೀಯ ಟೈಲರ್ ಶಹಬುದ್ದೀನ್ (29) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತರ ಕುಟುಂಬಸ್ಥರು ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಮನೆ ಮಾಲೀಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಸಂಬಂಧ ಇಲ್ಲಿನ ಸೆಕ್ಟರ್ 37 ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಸಂತ್ರಸ್ತರನ್ನು ಸೆಪ್ಟಿಕ್ ಟ್ಯಾಂಕ್ನಿಂದ ಹೊರತೆಗೆಯಲು ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ ಎಂದು ತನಿಖಾಧಿಕಾರಿ ಎಎಸ್ಐ ಜಸ್ವಂತ್ ಸಿಂಗ್ ತಿಳಿಸಿದ್ದಾರೆ.
Advertisement