‘ನಬನ್ನಾ ಚಲೋ’ ವೇಳೆ ಹಿಂಸಾಚಾರ: ಇದುವರೆಗೆ ನಾಲ್ವರ ಬಂಧನ

ಬಿಜೆಪಿಯ ‘ನಬನ್ನಾ ಚಲೋ’ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಇದುವರೆಗೆ ನಾಲ್ವರನ್ನು ಬಂಧಿಸಿದ್ದಾರೆ.
‘ನಬನ್ನಾ ಚಲೋ’ ವೇಳೆ ಹಿಂಸಾಚಾರ
‘ನಬನ್ನಾ ಚಲೋ’ ವೇಳೆ ಹಿಂಸಾಚಾರ
Updated on

ಕೋಲ್ಕತ್ತಾ: ಬಿಜೆಪಿಯ ‘ನಬನ್ನಾ ಚಲೋ’ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಇದುವರೆಗೆ ನಾಲ್ವರನ್ನು ಬಂಧಿಸಿದ್ದಾರೆ.

ಕೋಲ್ಕತ್ತಾದಲ್ಲಿ ಬಿಜೆಪಿ ರ್ಯಾಲಿ ವೇಳೆ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ಮತ್ತು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ ಆರೋಪದ ಮೇಲೆ ಕನಿಷ್ಠ ನಾಲ್ವರನ್ನು ಬುಧವಾರ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಲಿಯಾಘಾಟಾ, ಟಾಪ್ಸಿಯಾ ಮತ್ತು ಬೌಬಜಾರ್ ಪ್ರದೇಶಗಳಲ್ಲಿ ರಾತ್ರಿಯಿಡೀ ಪೊಲೀಸರು ನಡೆಸಿದ ದಾಳಿಯಲ್ಲಿ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮಂಗಳವಾರ ನಡೆದ ಬಿಜೆಪಿಯ ನಬನ್ನಾ ಚಲೋ'' ವೇಳೆ ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ದೇಬಜಿತ್ ಚಟ್ಟೋಪಾಧ್ಯಾಯ ಅವರನ್ನು ಬೌಬಜಾರ್ ಪ್ರದೇಶದಲ್ಲಿ ಕೆಲವರು ಬೆನ್ನಟ್ಟಿ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದರು.

ಕೋಲ್ಕತ್ತಾ ಪೊಲೀಸ್ ಪ್ರಧಾನ ಕಚೇರಿ ಬಳಿ ಪೊಲೀಸ್ ವಾಹನಕ್ಕೂ ಬೆಂಕಿ ಹಚ್ಚಲಾಗಿತ್ತು.

ಇನ್ನು ಪೊಲೀಸ್ ದಾಳಿಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಅವರು, ಇದರಲ್ಲಿ ಟಿಎಂಸಿ ಬೆಂಬಲಿಗರ ಕೈವಾಡ ಇದೆ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಹೊರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಪಶ್ಚಿಮ ಬಂಗಾಳವು "ಕಾನೂನು ರಹಿತ" ಮತ್ತು "ದಿವಾಳಿ" ರಾಜ್ಯವಾಗಿದೆ. ಪ್ರಜಾಪ್ರಭುತ್ವವನ್ನು ನಿಗ್ರಹಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com