ರಾಜ್ಯಪಾಲರನ್ನು ಭೇಟಿ ಮಾಡಿದ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಇಸಿ ಪ್ರತಿ ನೀಡುವಂತೆ ಮನವಿ
ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಗುರುವಾರ ರಾಂಚಿಯ ರಾಜಭವನದಲ್ಲಿ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಭೇಟಿ ಮಾಡಿದ್ದು, ತಮ್ಮ ವಿರುದ್ಧದ ಲಾಭದಾಯಕ ಹುದ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಕಳುಹಿಸಿರುವ ಅಭಿಪ್ರಾಯದ ಪ್ರತಿ ನೀಡುವಂತೆ ಮನವಿ ಮಾಡಿದ್ದಾರೆ.
ಒಬಿಸಿಗೆ ಶೇ. 27 ಮೀಸಲಾತಿ ನೀಡುವುದಕ್ಕೆ ಸಂಪುಟ ಅನುಮೋದನೆ ಮತ್ತು ವಸತಿ ನೀತಿಗೆ ಸಂಬಂಧಿಸಿದ ಎರಡು ಬಹು ನಿರೀಕ್ಷಿತ ಪ್ರಸ್ತಾಪಗಳನ್ನು ಅಂಗೀಕರಿಸಿದ ಒಂದು ದಿನದ ನಂತರ ಜಾರ್ಖಂಡ್ ಸಿಎಂ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.
ರಾಜ್ಯದಲ್ಲಿ ರಾಜಕೀಯ ಅಸ್ಥಿರತೆಯನ್ನು ಕೊನೆಗಾಣಿಸಲು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಮನವಿ ಮಾಡಿದರು.
ಪ್ರಮುಖವಾಗಿ, ಫೆಬ್ರವರಿ 10 ರಂದು ಮಾಜಿ ಮುಖ್ಯಮಂತ್ರಿ ರಘುಬರ್ ದಾಸ್ ನೇತೃತ್ವದ ಬಿಜೆಪಿ ನಿಯೋಗವು ಬೈಸ್ ಅವರನ್ನು ಭೇಟಿ ಮಾಡಿ, ಸಿಎಂ ಸೊರೆನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಮತ್ತು 1951 ರ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 9ಎ ಅಡಿಯಲ್ಲಿ ಸಾಂವಿಧಾನಿಕ ನಿಬಂಧನೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಿಎಂ ಪದಚ್ಯುತಿಗೆ ಮನವಿ ಸಲ್ಲಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ