'ನಾವು ನರೇಂದ್ರ ಮೋದಿಗೆ ಹೆದರುವುದಿಲ್ಲ, ನಮ್ಮ ಸತ್ಯಕ್ಕೆ ಅಡ್ಡಗಾಲು ಹಾಕಲು ಅವರಿಂದ ಸಾಧ್ಯವಿಲ್ಲ': ರಾಹುಲ್ ಗಾಂಧಿ
ನವದೆಹಲಿ: ದೇಶಾದ್ಯಂತ ಸುದ್ದಿಮಾಡಿರುವ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಕಂಟಕವಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಒಡೆತನದ ನ್ಯಾಷನಲ್ ಹೆರಾಲ್ಡ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಲಿಮಿಟೆಡ್ ಕಚೇರಿಗೆ ಜಾರಿ ನಿರ್ದೇಶನಾಲಯ ನಿನ್ನೆ ಬೀಗ ಜಡಿದಿದೆ.
ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕಳೆದ ತಿಂಗಳು ಸುಮಾರು 12 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತ್ತು. ಕಾಂಗ್ರೆಸ್ ಅಧೀನದಲ್ಲಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಮಾಲೀಕತ್ವ ಹೊಂದಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆಸ್ತಿಗಳ ಸ್ವಾಧೀನ ಪ್ರಕ್ರಿಯೆಯಲ್ಲಿ ಹಣಕಾಸು ಅಕ್ರಮಗಳನ್ನು ನಡೆಸಲಾಗಿದೆ ಎಂಬ ಆರೋಪದಡಿ ಕಾಂಗ್ರೆಸ್ ನಾಯಕರನ್ನು ಇ.ಡಿ ವಿಚಾರಣೆ ನಡೆಸುತ್ತಿದೆ.
ಮುಂದಿನ ಕ್ರಮ ಬಗ್ಗೆ ಚರ್ಚೆ: ಯಂಗ್ ಇಂಡಿಯಾ ಕಚೇರಿಯನ್ನು ತಾತ್ಕಾಲಿಕವಾಗಿ ಜಾರಿ ನಿರ್ದೇಶನಾಲಯ ಮುಚ್ಚುತ್ತಿದ್ದಂತೆ ಲೋಕಸಭೆ ಮತ್ತು ರಾಜ್ಯಸಭೆಯ ತನ್ನೆಲ್ಲಾ ಸದಸ್ಯರ ಸಭೆ ಕರೆದಿರುವ ಕಾಂಗ್ರೆಸ್ ಕಾಂಗ್ರೆಸ್ ಸಂಸದೀಯ ಕಚೇರಿಯಲ್ಲಿ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸುತ್ತಿದೆ.
ಯಂಗ್ ಇಂಡಿಯಾ ವಿರುದ್ಧ ಇಡಿ ಕ್ರಮದ ಬಗ್ಗೆ ಕಾಂಗ್ರೆಸ್ ಸಂಸದರು ಸಂಸತ್ತಿನಲ್ಲಿ ನಿಲುವಳಿ ಸೂಚನೆ ನೀಡಬಹುದು ಎಂದು ವರದಿಗಳು ಹೇಳುತ್ತಿವೆ.ಇದಲ್ಲದೆ, 24 ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿವಾಸ ಮತ್ತು 10 ಜನಪಥ್ನಲ್ಲಿರುವ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸ. ಯಂಗ್ ಇಂಡಿಯಾ ಕಚೇರಿಯನ್ನು ಸೀಲ್ ಮಾಡುವ ಇಡಿ ನಿರ್ಧಾರದ ನಂತರ ಮೂರು ಸ್ಥಳಗಳಲ್ಲಿ ಪ್ರತಿಭಟನಾಕಾರರು ಹೆಚ್ಚಿನ ಸಂಖ್ಯೆಯಲ್ಲಿ ಸೇರಬಹುದು ಎಂದು ವಿಶೇಷ ಭದ್ರತೆ ಒದಗಿಸಲಾಗಿದೆ.
ಇನ್ನು ಇಡಿ ವಿಚಾರಣೆ ಕುರಿತಂತೆ ಎಂದಿನಂತೆ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷದವರ ಧ್ವನಿಯನ್ನು ಹತ್ತಿಕ್ಕಲು ಪ್ರಧಾನಿ ಮೋದಿಯವರು ಒತ್ತಡದ ತಂತ್ರ ಅನುಸರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಕಳೆದ ಜೂನ್ ನಲ್ಲಿ ಐದು ದಿನಗಳ ಕಾಲ ಸುಮಾರು 50 ಗಂಟೆಗಳ ಕಾಲ ರಾಹುಲ್ ಗಾಂಧಿಯವರನ್ನು ವಿಚಾರಣೆ ನಡೆಸಿತ್ತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಅವರ ತಾಯಿ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನೂ ಕೇಂದ್ರ ಸಂಸ್ಥೆ ಪ್ರಶ್ನಿಸಿದೆ.
ರಾಹುಲ್ ಗಾಂಧಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸುದ್ದಿಗಾರರು ಕೇಳಿದಾಗ, ನೀವು ನ್ಯಾಷನಲ್ ಹೆರಾಲ್ಡ್ ಬಗ್ಗೆ ಮಾತನಾಡುತ್ತಿದ್ದರೆ, ಇಡೀ ವಿಷಯವು ಬೆದರಿಕೆ ಹಾಕುವ ತಂತ್ರವಾಗಿದೆ. ಸ್ವಲ್ಪ ಒತ್ತಡ ಹಾಕಿದರೆ ನಾವು ವಿರೋಧ ಪಕ್ಷದವರು ಸುಮ್ಮನಿರುತ್ತೇವೆ ಎಂದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಭಾವಿಸಿದ್ದಾರೆ. ಆದರೆ ನಾವು ಸುಮ್ಮನಾಗುವುದಿಲ್ಲ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಪ್ರಜಾಪ್ರಭುತ್ವದ ವಿರುದ್ಧ ಏನೇ ಮಾಡಿದರೂ ನಾವು ನಮ್ಮ ನೆಲೆಯಲ್ಲಿ ನಿಲ್ಲುತ್ತೇವೆ ಎಂದು ಹೇಳಿದರು.
ತಾವು ಈ ಪ್ರಕರಣದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಹೇಳುತ್ತಿದೆ ಎಂದಾಗ ರಾಹುಲ್ ಗಾಂಧಿ ಇದಕ್ಕೆ ಹೆದರಿ ಓಡಿಹೋಗುವವರು ಯಾರು, ನಾವು ಹೆದರುವುದಿಲ್ಲ, ತಪ್ಪಿಸಿಕೊಂಡು ಓಡಿಹೋಗುವ ಬಗ್ಗೆ ಬಿಜೆಪಿಯವರೇ ಮಾತನಾಡುತ್ತಿದ್ದಾರೆ. ನರೇಂದ್ರ ಮೋದಿಗೆ ನಾವು ಹೆದರುವುದಿಲ್ಲ, ಏನು ಬೇಕಾದರೂ ಮಾಡಿ, ಪರವಾಗಿಲ್ಲ, ಪ್ರಜಾಪ್ರಭುತ್ವವನ್ನು ರಕ್ಷಿಸುವ, ದೇಶದಲ್ಲಿ ಸಾಮರಸ್ಯವನ್ನು ಕಾಪಾಡುವ ನನ್ನ ಕೆಲಸವನ್ನು ನಾನು ಮಾಡುತ್ತೇನೆ ಎಂದು ರಾಹುಲ್ ಗಾಂಧಿ ದೃಢವಾಗಿ ಹೇಳಿದರು.