ಪಾಟ್ನಾ: ಬಿಹಾರದ ಆಡಳಿತರೂಢ ಜೆಡಿಯು ಮತ್ತು ಬಿಜೆಪಿ ನಡುವೆ ಶೀತಲ ಸಮರ ನಡೆಯುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಜೆಡಿಯು - ಬಿಜೆಪಿ ಮೈತ್ರಿ ಮುರಿದುಬಿದ್ದರೆ ಜೆಡಿಯು "ಅಪ್ಪಿಕೊಳ್ಳಲು" ಸಿದ್ಧ ಎಂದು ಪ್ರತಿಪಕ್ಷ ಆರ್ಜೆಡಿ ಸೋಮವಾರ ಹೇಳಿದೆ.
ಜೆಡಿಯು ಮತ್ತು ಬಿಜೆಪಿ ಮಧ್ಯ ಭಿನ್ನಮತ ಸ್ಫೋಟಗೊಂಡಿದ್ದು, ಮಂಗಳವಾರ ಎರಡೂ ಪಕ್ಷಗಳು ಶಾಸಕರ ಸಭೆ ಕರೆದಿರುವುದು ಪರಿಸ್ಥಿತಿ ಕೈಮೀರಿದೆ ಎಂಬುದಕ್ಕೆ ಸ್ಪಷ್ಟ ಸೂಚನೆಯಾಗಿದೆ ಎಂದು ಆರ್ಜೆಡಿ ರಾಷ್ಟ್ರೀಯ ಉಪಾಧ್ಯಕ್ಷ ಶಿವಾನಂದ್ ತಿವಾರಿ ಅವರು ತಿಳಿಸಿದ್ದಾರೆ.
"ಆ ಎರಡು ಪಕ್ಷಗಳಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ನನಗೆ ವೈಯಕ್ತಿಕವಾಗಿ ತಿಳಿದಿಲ್ಲ. ಆದರೆ ಸಾಕಷ್ಟು ಸಂಖ್ಯಾಬಲ ಹೊಂದಿದ್ದ ಎರಡೂ ಪಕ್ಷಗಳು ಅಂತಹ ಸಭೆಗಳನ್ನು ಕರೆದಿರುವುದು ಗಂಭೀರ ವಿಚಾರ. ನಾವು ಅದನ್ನು ನಿರ್ಲಕ್ಷಿಸಲಾಗುವುದಿಲ್ಲ" ಎಂದು ತಿವಾರಿ ಸುದ್ದಿಗಾರರಿಗೆ ಹೇಳಿದ್ದಾರೆ.
"ಒಂದು ವೇಳೆ ನಿತೀಶ್ ಕುಮಾರ್ ಅವರು ಎನ್ಡಿಎ ತ್ಯಜಿಸಲು ನಿರ್ಧರಿಸಿದರೆ, ಅವರನ್ನು ಅಪ್ಪಿಕೊಳ್ಳುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆ ಇಲ್ಲ. ಬಿಜೆಪಿ ವಿರುದ್ಧ ಹೋರಾಡಲು ಆರ್ಜೆಡಿ ಬದ್ಧವಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ಹೋರಾಟಕ್ಕೆ ಕೈಜೋಡಿಸಲು ನಿರ್ಧರಿಸಿದರೆ. ನಾವು ಅವರನ್ನು ಸ್ವಾಗತಿಸುತ್ತೇವೆ" ಎಂದು ತಿವಾರಿ ತಿಳಿಸಿದ್ದಾರೆ.
ಸದ್ಯ ಜೆಡಿ(ಯು) ಕೇಂದ್ರ ಸರ್ಕಾರದ ಸಚಿವ ಸಂಪುಟದಿಂದ ಹೊರಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಅಗತ್ಯ ಸಹಕಾರ ನೀಡುತ್ತಿಲ್ಲ ಎಂದು ಬಿಹಾರ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಭಾನುವಾರ ನಡೆದ ನೀತಿ ಆಯೋಗದ ಸಭೆಗೆ ನಿತೀಶ್ ಕುಮಾರ್ ಗೈರಾಗಿದ್ದರು. ಅಲ್ಲದೆ ನಾಳೆ ಜೆಡಿಯು ಸಂಸದರು ಮತ್ತು ಶಾಸಕರ ಸಭೆ ಕರೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
Advertisement