ನವದೆಹಲಿ: ಪೊಲೀಸ್ ಕಸ್ಟಡಿಯಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್!
ನವದೆಹಲಿ: ರಾಷ್ಟ್ರೀಯ ರಾಜಧಾನಿಯ ಗಡಿಯಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಟಿಕಾಯತ್ ದೆಹಲಿಯ ಮಧು ವಿಹಾರ್ ಪೊಲೀಸ್ ಠಾಣೆಯ ವಶದಲ್ಲಿದ್ದಾರೆ.
ಇದಕ್ಕೂ ಮುನ್ನಾ ವಿಡಿಯೋ ಬಿಡುಗಡೆ ಮಾಡಿರುವ ಅವರು, ಪೊಲೀಸರು ತಮ್ಮನ್ನು ತಡೆದಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಪೊಲೀಸರು ರಾಕೇಶ್ ಟಿಕಾಯತ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ. ಮೂಲಗಳ ಪ್ರಕಾರ, ದೇಶದ ನಿರುದ್ಯೋಗದ ವಿರುದ್ಧ ಜಂತರ್- ಮಂತರ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಟಿಕಾಯತ್ ತೆರಳುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಟಿಕಾಯತ್, ಈ ಬಂಧನ ಹೊಸ ಕ್ರಾಂತಿಯನ್ನು ತರಲಿದೆ. ಕೊನೆಯ ಉಸಿರು ಇರುವವರೆಗೂ ಈ ಹೋರಾಟ ಮುಂದುವರೆಯಲಿದೆ. ನಿಲ್ಲುವುದಿಲ್ಲ. ಬಿಡುವುದಿಲ್ಲ. ದಣಿವಾಗುವುದಿಲ್ಲ ಎಂದು ಹೇಳಿದ್ದಾರೆ.
ಘಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು, ಜಂತರ್ ಮಂತರ್ ಗೆ ಹೋಗುತ್ತಿದ್ದಾಗ ಘಾಜಿಪುರದಲ್ಲಿ ಟಿಕಾಯತ್ ಅವರನ್ನು ತಡೆಯಲಾಯಿತು. ಇದರ ನಂತರ ಅವರನ್ನು ವಶಕ್ಕೆ ತೆಗೆದುಕೊಂಡು ಮಧು ವಿಹಾರ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ ಪೊಲೀಸರು ಅವರೊಂದಿಗೆ ಮಾತನಾಡಿ ಹಿಂತಿರುಗುವಂತೆ ವಿನಂತಿಸಿದರು ಎಂದು ತಿಳಿಸಿದ್ದಾರೆ.
ದೆಹಲಿ ಸರ್ಕಾರದ ಸಚಿವ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಗೋಪಾಲ್ ರೈ ಅವರು ಟಿಕಾಯತ್ ಬಂಧನವನ್ನು ಖಂಡಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ