ರಜೌರಿ ಸೇನಾ ಶಿಬಿರದ ಮೇಲೆ ಆತ್ಮಾಹುತಿ ದಾಳಿ: ಹುತಾತ್ಮ ಯೋಧರ ಸಂಖ್ಯೆ ಐದಕ್ಕೆ ಏರಿಕೆ
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಆಗಸ್ಟ್ 11 ರಂದು ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಉಧಮ್ಪುರದ ಉತ್ತರ ಕಮಾಂಡ್ನಲ್ಲಿರುವ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಹವಾಲ್ದಾರ್ ಸತ್ಪಾಲ್ ಸಿಂಗ್ ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದರೊಂದಿಗೆ ರಜೌರಿ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಇಂದು ಉಧಂಪುರದ ಕಮಾಂಡ್ ಆಸ್ಪತ್ರೆಯಲ್ಲಿ ಯೋಧನಿಗೆ ಪುಷ್ಪಾರ್ಚನೆ ಕಾರ್ಯಕ್ರಮ ನಡೆಸಿದ ನಂತರ ಅವರ ಪಾರ್ಥಿವ ಶರೀರವನ್ನು ರಾಜಸ್ಥಾನದ ಅವರ ಸ್ವಗ್ರಾಮಕ್ಕೆ ಕೊಂಡೊಯ್ಯಲಾಯಿತು ಎಂದು ಅವರು ಹೇಳಿದ್ದಾರೆ.
ಸೇನಾ ಶಿಬಿರದೊಳಗೆ ನುಗ್ಗಲು ಪ್ರಯತ್ನಿಸಿದ ನಿಷೇಧಿತ ಜೈಷ್ ಇ ಮೊಹಮ್ಮದ್ ಸಂಘಟನೆ ಇಬ್ಬರು ಆತ್ಮಾಹತ್ಯಾ ದಾಳಿಕೋರರನ್ನು ಹತ್ಯೆ ಮಾಡಲಾಗಿದೆ. ಈ ಗುಂಡಿನ ಕಾಳಗದಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.