ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಆಶಿಶ್ ಮಿಶ್ರಾ, ಇತರ 13 ಮಂದಿ ವಿರುದ್ಧ ಆರೋಪ ದಾಖಲಿಸಿದ ಕೋರ್ಟ್
ಲಖನೌ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಅಕ್ಟೋಬರ್ 2021 ರಲ್ಲಿ ನಾಲ್ವರು ರೈತರ ಮೇಲೆ ಎಸ್ ಯುವಿ ಕಾರು ಚಲಾಯಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಇತರ 13 ಜನರ ವಿರುದ್ಧ ಆರೋಪ ಪಟ್ಟಿ ಮಾಡಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ.
ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಸುನಿಲ್ ಕುಮಾರ್ ವರ್ಮಾ ಅವರು ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 16ಕ್ಕೆ ನಿಗದಿಪಡಿಸಿದ್ದಾರೆ ಎಂದು ಜಿಲ್ಲಾ ಸರ್ಕಾರಿ ವಕೀಲ(ಕ್ರಿಮಿನಲ್) ಅರವಿಂದ್ ತ್ರಿಪಾಠಿ ಅವರು ಪಿಟಿಐಗೆ ತಿಳಿಸಿದ್ದಾರೆ.
ಇದನ್ನು ಓದಿ: ಲಖಿಂಪುರ: ಆಶಿಶ್ ಮಿಶ್ರಾ ಶರಣಾಗತಿ, ಮತ್ತೆ ಜೈಲಿಗೆ
ಕಳೆದ ವರ್ಷ ಅಕ್ಟೋಬರ್ 3 ರಂದು, ಆಶಿಶ್ ಮಿಶ್ರಾ ಮಹೀಂದ್ರಾ ಥಾರ್ ಎಸ್ಯುವಿಯಲ್ಲಿದ್ದರು ಎಂದು ಹೇಳಲಾಗಿದ್ದು, ಲಖಿಂಪುರ ಖೇರಿಯಲ್ಲಿ ಈಗ ರದ್ದಾಗಿರುವ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನಾಲ್ವರು ರೈತರು ಮತ್ತು ಪತ್ರಕರ್ತರ ಮೇಲೆ ಕಾರು ಹರಿಸಿದ ಆರೋಪ ಎದುರಿಸುತ್ತಿದ್ದಾರೆ.