ಮಾಂಡೌಸ್ ಚಂಡಮಾರುತ: ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶಕ್ಕೆ ಭಾರೀ ಮಳೆ ಎಚ್ಚರಿಕೆ
ನವದೆಹಲಿ: ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದೆ.
ಮಾಂಡೌಸ್' ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಕಾರೈಕಲ್ನಿಂದ ಪೂರ್ವ ಆಗ್ನೇಯಕ್ಕೆ ಸುಮಾರು 500 ಕಿಮೀ ದೂರದಲ್ಲಿದೆ. ಇದು ಪಶ್ಚಿಮ-ವಾಯುವ್ಯಕ್ಕೆ ಚಲಿಸಲಿದ್ದು, ನಂತರ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಪ್ರವೇಶಿಸಿ, ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ಡಿಸೆಂಬರ್ 9 ರ ಮಧ್ಯರಾತ್ರಿ 70 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ನೀಡಿದೆ.
ಮಾಂಡೌಸ್ ಚಂಡಮಾರುತದ ಪ್ರಭಾವದಿಂದಾಗಿ ಮುಂದಿನ 2 ದಿನಗಳ ಕಾಲ ಹಲವಾರು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದೆ. ತಮಿಳುನಾಡಿನ ಕರಾವಳಿ ಭಾಗ, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ.
ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗ ಮತ್ತು ರಾಯಲಸೀಮಾದ ಅಕ್ಕ ಪಕ್ಕದ ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 10ರ ವರೆಗೂ ಭಾರೀ ಮಳೆ ಮುಂದುವರಿಯಲಿದ್ದು, ಚಂಡಮಾರುತದ ಪ್ರಭಾವದಿಂದಾಗಿ ಭಾರೀ ಗಾಳಿಯೂ ಬೀಸಲಿದೆ ಎಂದು ತಿಳಿಸಿದ್ದಾರೆ.
ಪುದುಚೆರಿಯು ಚೆನ್ನೈನಿಂದ ಸುಮಾರು 160 ಕಿಮೀ ದೂರದಲ್ಲಿದ್ದು, ಭಾರೀ ಮಳೆಯಾಗುವ ಮುನ್ಸೂಚನೆಗಳಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.