ರಾಜಸ್ಥಾನ: ರಾಜೀನಾಮೆ ವಾಪಸ್ ಪಡೆಯುವಂತೆ ಪಕ್ಷದ ಶಾಸಕರಿಗೆ ಸೂಚಿಸಿದ ಕಾಂಗ್ರೆಸ್ ಹೈಕಮಾಂಡ್
ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಸುಮಾರು ಒಂದು ವರ್ಷ ಬಾಕಿ ಇರುವಾಗ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಬಣಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಸಜ್ಜಾಗಿದೆ.
Published: 31st December 2022 12:07 PM | Last Updated: 31st December 2022 12:07 PM | A+A A-

ಅಶೋಕ್ ಗೆಹ್ಲೋಟ್-ಸಚಿನ್ ಪೈಲಟ್
ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಸುಮಾರು ಒಂದು ವರ್ಷ ಬಾಕಿ ಇರುವಾಗ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಬಣಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಕಾಂಗ್ರೆಸ್ ಹೈಕಮಾಂಡ್ ಸಜ್ಜಾಗಿದೆ.
ಸೆಪ್ಟೆಂಬರ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಬಹಿಷ್ಕರಿಸಿದ ನಂತರ ರಾಜೀನಾಮೆ ನೀಡಿದ್ದ ಗೆಹ್ಲೋಟ್ ಬಣದ ಸುಮಾರು 91 ಶಾಸಕರನ್ನು ಈಗ ತಮ್ಮ ರಾಜೀನಾಮೆಯನ್ನು ಹಿಂಪಡೆಯುವಂತೆ ಕೇಳಲಾಗಿದೆ. ರಾಜೀನಾಮೆ ಹಿಂಪಡೆಯಬೇಕೆಂದು ಕೆಲ ಶಾಸಕರು ವಿಧಾನಸಭೆ ಸ್ಪೀಕರ್ ಸಿ.ಪಿ. ಜೋಶಿ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಪಕ್ಷದ ನೂತನ ರಾಜ್ಯ ಉಸ್ತುವಾರಿ ಸುಖಜೀಂದರ್ ರಾಂಧವಾ ಅವರು ಶುಕ್ರವಾರ ಸ್ಪೀಕರ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದರು.
ಜೋಶಿ ಅವರೊಂದಿಗಿನ ಸಭೆಯಲ್ಲಿ ಪಕ್ಷದ ಹೈಕಮಾಂಡ್ ಸಂದೇಶವನ್ನು ಉಲ್ಲೇಖಿಸಿರುವ ರಾಂಧವ ಅವರು ಶಾಸಕರ ವಿವಾದವನ್ನು ಇತ್ಯರ್ಥಪಡಿಸುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಎರಡು ಬಣಗಳ ನಡುವೆ ಸಮನ್ವಯ ಸಾಧಿಸುವ ಪ್ರಯತ್ನದ ಭಾಗವಾಗಿ ರಾಂಧವ ಅವರು ಸ್ಪೀಕರ್ ಅವರನ್ನು ಭೇಟಿಯಾಗುತ್ತಿದ್ದಾರೆ.
ಜನವರಿ 23 ರಂದು ರಾಜ್ಯ ವಿಧಾನಸಭೆಯ ಬಜೆಟ್ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೂ ಮುನ್ನ ಶಾಸಕರ ರಾಜೀನಾಮೆ ಹಿಂಪಡೆಯುವುದು ಆಡಳಿತ ಪಕ್ಷಕ್ಕೆ ಅನಿವಾರ್ಯವಾಗಿದೆ.
ಶಾಸಕರ ರಾಜೀನಾಮೆಗೆ ಸಂಬಂಧಿಸಿದಂತೆ ಪ್ರತಿಪಕ್ಷದ ಉಪನಾಯಕ ರಾಜೇಂದ್ರ ರಾಥೋಡ್ ರಾಜಸ್ಥಾನ ಹೈಕೋರ್ಟ್ನಲ್ಲಿ ರಿಟ್ ಸಲ್ಲಿಸಿದ್ದು, ನ್ಯಾಯಾಲಯವು ಸ್ಪೀಕರ್ನಿಂದ ಉತ್ತರವನ್ನು ಕೇಳಿದೆ.
ಬಿಜೆಪಿಯು ಕಾಂಗ್ರೆಸ್ ಶಾಸಕರ ರಾಜೀನಾಮೆಯನ್ನು ಪ್ರಮುಖ ವಿಷಯವನ್ನಾಗಿ ಮಾಡಿಕೊಂಡಿದ್ದು, ಬಜೆಟ್ ಅಧಿವೇಶನದಲ್ಲಿ ಇದೇ ವಿಚಾರದ ಬಗ್ಗೆ ಸ್ಪಷ್ಟಪಡಿಸಲು ಪ್ರತಿಪಕ್ಷಗಳು ಸ್ಪೀಕರ್ ಅವರನ್ನು ಕೇಳುವ ನಿರೀಕ್ಷೆಯಿದೆ.
ರಾಜೀನಾಮೆ ಹಿಂಪಡೆಯಲು ಕಾನೂನಿನಲ್ಲಿ ಅವಕಾಶವಿಲ್ಲ. ರಾಜೀನಾಮೆ ನೀಡಿದ ಶಾಸಕರು ಶಾಸಕರಾಗಿ ಮುಂದುವರಿಯಲು ಸ್ಪೀಕರ್ ಅವಕಾಶ ನೀಡಬಾರದು. ಸದನದ ವಿಶ್ವಾಸವನ್ನು ಪಡೆಯುವಲ್ಲಿ ವಿಫಲವಾಗಿರುವ ಅಕ್ರಮ ಸರ್ಕಾರದಿಂದ ರಾಜ್ಯವನ್ನು ನಡೆಸಲಾಗುತ್ತಿದೆ ಎಂದು ವಿರೋಧ ಪಕ್ಷದ ಉಪನಾಯಕ ರಾಥೋಡ್ ಹೇಳಿದ್ದಾರೆ.