ಅಮರಾವತಿ ಹತ್ಯೆ: ಎನ್ಐಎ ಇನ್ನೂ ಅಧಿಕೃತವಾಗಿ ತನಿಖೆ ವಹಿಸಿಕೊಂಡಿಲ್ಲ; ಬಂಧಿತ 'ಮಾಸ್ಟರ್ಮೈಂಡ್' ಬ್ಯಾಂಕ್ ಖಾತೆಗಳ ಪರಿಶೀಲನೆ
ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದ ಔಷಧ ವ್ಯಾಪಾರಿಯನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ ಹತ್ಯೆ ಮಾಡಲಾಗಿದ್ದು, ರಾಷ್ಟ್ರೀಯ ತನಿಖಾ...
Published: 03rd July 2022 07:24 PM | Last Updated: 03rd July 2022 07:24 PM | A+A A-

ಉಮೇಶ್ ಪ್ರಹ್ಲಾದರಾವ್ ಕೊಲ್ಹೆ
ಅಮರಾವತಿ: ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದ ಔಷಧ ವ್ಯಾಪಾರಿಯನ್ನು ಮಹಾರಾಷ್ಟ್ರದ ಅಮರಾವತಿಯಲ್ಲಿ ಹತ್ಯೆ ಮಾಡಲಾಗಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಇನ್ನೂ ಅಧಿಕೃತವಾಗಿ ಪ್ರಕರಣದ ತನಿಖೆ ವಹಿಸಿಕೊಂಡಿಲ್ಲ ಎಂದು ಭಾನುವಾರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಿಟಿಐ ಜೊತೆ ಮಾತನಾಡಿದ ಪೂರ್ವ ಮಹಾರಾಷ್ಟ್ರದ ಅಮರಾವತಿ ನಗರ ಪೊಲೀಸ್ ಕಮಿಷನರ್ ಡಾ.ಆರತಿ ಸಿಂಗ್ ಅವರು, "ಪ್ರಕರಣವನ್ನು ಎನ್ಐಎಗೆ ವರ್ಗಾಯಿಸುವ ಬಗ್ಗೆ ನಮಗೆ ಇನ್ನೂ ಯಾವುದೇ ಆದೇಶ ಬಂದಿಲ್ಲ, ಸೋಮವಾರದ ವೇಳೆಗೆ ನಮಗೆ ಆದೇಶ ಬಂದರೆ, ಪ್ರಕರಣವನ್ನು ಅಧಿಕೃತವಾಗಿ ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸಲಾಗುವುದು" ಎಂದು ಹೇಳಿದ್ದಾರೆ.
ಇದನ್ನು ಓದಿ: ಅಮರಾವತಿ ಔಷಧ ವ್ಯಾಪಾರಿಯ ಹತ್ಯೆ: ಮಾಸ್ಟರ್ಮೈಂಡ್ ಇರ್ಫಾನ್ ಖಾನ್ ಬಂಧನ
ಪ್ರಕರಣದ ತನಿಖೆಗಾಗಿ ಅಮರಾವತಿಗೆ ಎನ್ಐಎ ತಂಡ ಭೇಟಿ ನೀಡಿದ ಒಂದು ದಿನದ ನಂತರ ಆರತಿ ಸಿಂಗ್ ಅವರು ಈ ಹೇಳಿಕೆ ನೀಡಿದ್ದಾರೆ.
ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರು ಶನಿವಾರ ಟ್ವೀಟ್ ಮಾಡಿದ್ದರು.
ಅಮರಾವತಿ ನಗರ ಪೊಲೀಸರ ಅಪರಾಧ ವಿಭಾಗದ ಪೊಲೀಸರು ಶನಿವಾರ ನಾಗ್ಪುರದಲ್ಲಿ ಕೆಮಿಸ್ಟ್ ಹತ್ಯೆಯ ಮಾಸ್ಟರ್ ಮೈಂಡ್ ಇರ್ಫಾನ್ ಖಾನ್(32) ನನ್ನು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಇರ್ಫಾನ್ ಎನ್ಜಿಒ ಸಂಸ್ಥೆಯ ನಿರ್ದೇಶಕರಾಗಿದ್ದು, ಸಂಸ್ಥೆಯ ಬ್ಯಾಂಕ್ ಖಾತೆಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಆಗಿದ್ದ ಕನ್ಹಯ್ಯಾ ಲಾಲ್ ಅವರ ಕೊಲೆ ಪ್ರಕರಣ ಮಾಸುವ ಮುನ್ನವೇ ಅಮರಾವತಿಯಲ್ಲಿ ಕೆಮಿಸ್ಟ್ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಅಮರಾವತಿ ನಗರದಲ್ಲಿ ಮೆಡಿಕಲ್ ಸ್ಟೋರ್ ನಡೆಸುತ್ತಿದ್ದ ಕೊಲ್ಹೆ ಅವರು ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ ಪೋಸ್ಟ್ ಅನ್ನು ವಾಟ್ಸಾಪ್ ಗ್ರೂಪಿನಲ್ಲಿ ಹಂಚಿಕೊಂಡಿದ್ದರು. ಆ ಗುಂಪಿನಲ್ಲಿ ಮುಸ್ಲಿಮರು ಇದ್ದರು. ಇದು ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.