ಮುಂದಿನ ದಿನಗಳಲ್ಲಿ ಭಾರೀ ಮಳೆ: ಕರ್ನಾಟದ ಸೇರಿ ನಾಲ್ಕೈದು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ
ಗುಡ್ಡಗಾಡು ರಾಜ್ಯವಾದ ಉತ್ತರಾಖಂಡದಿಂದ ದಕ್ಷಿಣದ ತೆಲಂಗಾಣ ರಾಜ್ಯಕ್ಕೆ ಮುಂಗಾರು ಮಾರುತಗಳು ಅಬ್ಬರಿಸುತ್ತಿವೆ. ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
Published: 11th July 2022 04:23 PM | Last Updated: 11th July 2022 06:50 PM | A+A A-

ಸಾಂದರ್ಭಿಕ ಚಿತ್ರ
ಮುಂಬೈ: ಗುಡ್ಡಗಾಡು ರಾಜ್ಯವಾದ ಉತ್ತರಾಖಂಡದಿಂದ ದಕ್ಷಿಣದ ತೆಲಂಗಾಣ ರಾಜ್ಯಕ್ಕೆ ಮುಂಗಾರು ಮಾರುತಗಳು ಅಬ್ಬರಿಸುತ್ತಿವೆ. ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆಯು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದೆ. ತೆಲಂಗಾಣ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಿಗೆ ರೆಡ್ ಅಲರ್ಟ್, ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಏತನ್ಮಧ್ಯೆ, ಮಳೆಯಿಂದಾಗಿ ಹಲವಾರು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಗುಜರಾತ್ನಲ್ಲಿ 3,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಅಗತ್ಯವಿರುವ ಕಡೆ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಅಧಿಕಾರಿಗಳನ್ನು ನೇಮಿಸಲಾಗಿದೆ.
ದಕ್ಷಿಣ ಗುಜರಾತ್ನ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದಿದ್ದು, ಕೆಲವು ನದಿಗಳ ನೀರಿನ ಮಟ್ಟ ಏರಿಕೆಗೆ ಕಾರಣವಾಗಿದ್ದು, ವಿವಿಧ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಛೋಟೌದೈಪುರದಲ್ಲಿ 400, ನವಸಾರಿಯಲ್ಲಿ 550 ಮತ್ತು ವಲ್ಸಾದ್ನಲ್ಲಿ 470 ಸೇರಿದಂತೆ ಗುಜರಾತ್ನಲ್ಲಿ ಒಟ್ಟು 3,250 ಜನರನ್ನು ಸ್ಥಳಾಂತರಿಸಲಾಗಿದೆ. ಹೆಚ್ಚಿನ ಜನರ ಸ್ಥಳಾಂತರಕ್ಕೆ ಸಿದ್ಧರಾಗುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಎಲ್ಲಾ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.
ಇದನ್ನು ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ: ಕೊಡಗು, ಕರಾವಳಿ ಜಿಲ್ಲೆಗಳಿಗೆ ಸಿಎಂ ಬೊಮ್ಮಾಯಿ ನಾಳೆಯಿಂದ ಎರಡು ದಿನ ಪ್ರವಾಸ
ಒರ್ಸಾಂಗ್ ನದಿ ಮಟ್ಟದಲ್ಲಿ ಏರಿಕೆಯಾದ ನಂತರ ವಲ್ಸಾದ್ನ ಕೆಲವು ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಕಾವೇರಿ ಮತ್ತು ಅಂಬಿಕಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ನವಸಾರಿ ಜಿಲ್ಲೆಯಲ್ಲಿಯೂ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ಪ್ರಸ್ತುತ, ರಾಜ್ಯದಲ್ಲಿ 13 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡಗಳು ಮತ್ತು 16 ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಅನ್ನು ನಿಯೋಜಿಸಲಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಎಸ್ಡಿಆರ್ಎಫ್ನ ಒಂದು ತುಕಡಿ ವಡೋದ್ರಾದಿಂದ ಛೋಟೌದೈಪುರಕ್ಕೆ ತೆರಳಿದೆ.
ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.