ದೆಹಲಿಯ ಇಡಿ ಕಚೇರಿಗೆ ಸೋನಿಯಾ ಗಾಂಧಿ ಆಗಮನ: ಇಡಿ ವಿಚಾರಣೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಗದ್ದಲ ನುಂಗಿಹಾಕಿದ ಸಂಸತ್ತು ಕಲಾಪ

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಜಾರಿ ನಿರ್ದೇಶನಾಲಯದ ವಿಚಾರಣೆಯನ್ನು ಎದುರಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈಗಾಗಲೇ ಇಡಿ ಕಚೇರಿಗೆ ಆಗಮಿಸಿದ್ದಾರೆ. ಇತ್ತ ದೆಹಲಿಯ ಕಾಂಗ್ರೆಸ್ ಕಚೇರಿ, ಇಡಿ ಕಚೇರಿಯ ಹೊರಗೆ ಹಾಗೂ ಸಂಸತ್ತು ಒಳಗೆ ಕಲಾಪದಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ತೀವ್ರವಾಗಿದೆ. 
ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ಇಡಿ ಕಚೇರಿಗೆ ಆಗಮಿಸಿದ ಸೋನಿಯಾ ಗಾಂಧಿ
ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ಇಡಿ ಕಚೇರಿಗೆ ಆಗಮಿಸಿದ ಸೋನಿಯಾ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಕೇಸಿನಲ್ಲಿ ಜಾರಿ ನಿರ್ದೇಶನಾಲಯದ ವಿಚಾರಣೆಯನ್ನು ಎದುರಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈಗಾಗಲೇ ಇಡಿ ಕಚೇರಿಗೆ ಆಗಮಿಸಿದ್ದಾರೆ. ಇತ್ತ ದೆಹಲಿಯ ಕಾಂಗ್ರೆಸ್ ಕಚೇರಿ, ಇಡಿ ಕಚೇರಿಯ ಹೊರಗೆ ಹಾಗೂ ಸಂಸತ್ತು ಒಳಗೆ ಕಲಾಪದಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ತೀವ್ರವಾಗಿದೆ. 

ಇಂದು ಬೆಳಗ್ಗೆ ಸಂಸತ್ತು ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳು ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಮತ್ತು ಸೋನಿಯಾ ಗಾಂಧಿಯವರಿಗೆ ಇಡಿ ಸಮನ್ಸ್ ನೀಡಿದ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದರಿಂದ ಲೋಕಸಭೆಯ ಕಲಾಪವನ್ನು ಬೆಳಗ್ಗೆ 11.30ಕ್ಕೆ ಮುಂದೂಡಲಾಯಿತು. 

ಸದನವು ದಿನದ ಮಟ್ಟಿಗೆ ಸಭೆ ಸೇರುತ್ತಿದ್ದಂತೆಯೇ ಪ್ರತಿಪಕ್ಷದ ಸದಸ್ಯರು ವಿವಿಧ ವಿಷಯಗಳನ್ನು ಪ್ರಸ್ತಾಪಿಸಿ ಘೋಷಣೆಗಳನ್ನು ಕೂಗಲಾರಂಭಿಸಿದರು. ಕೆಲ ಕಾಂಗ್ರೆಸ್ ಸದಸ್ಯರು ಸೋನಿಯಾ ಗಾಂಧಿ ಅವರ ಭಾವಚಿತ್ರವಿರುವ ‘ಸತ್ಯಮೇವ ಜಯತೇ’ ಎಂಬ ಫಲಕಗಳನ್ನು ಪ್ರದರ್ಶಿಸಿದರು.

ಪ್ರತಿಪಕ್ಷದ ಸದಸ್ಯರು ಕೂಡ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದರು. ಗದ್ದಲ ಮುಂದುವರಿದಂತೆ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು 11.30ಕ್ಕೆ ಮುಂದೂಡಿದರು.

ಇದೇ ರೀತಿಯ ದೃಶ್ಯಗಳು ರಾಜ್ಯಸಭೆಯಲ್ಲಿ ಕೂಡ ಮುಂದುವರಿದವು. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಬೆಲೆ ಏರಿಕೆ ಮತ್ತು ದೈನಂದಿನ ಅಗತ್ಯ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ ವಿಧಿಸುವ ವಿಷಯಗಳನ್ನು ಪ್ರಸ್ತಾಪಿಸಲು ಪ್ರಯತ್ನಿಸಿದ್ದರಿಂದ ಗುರುವಾರ ಕಲಾಪವನ್ನು ಸುಮಾರು ಒಂದು ಗಂಟೆಗಳ ಕಾಲ ಮುಂದೂಡಲಾಯಿತು. ಪ್ರತಿಪಕ್ಷದ ಸಂಸದರು ಮೋದಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಮತ್ತು ನಂತರ ಬೆಲೆ ಏರಿಕೆ ಮತ್ತು ಜಿಎಸ್‌ಟಿ ವಿರುದ್ಧ ಮತ್ತು ಅಗತ್ಯ ವಸ್ತುಗಳ ಬೆಲೆಗಳ ಘೋಷಣೆಗಳ ಫಲಕಗಳನ್ನು ಹಿಡಿದು ಕೂಗಿದರು. 

ಸಭಾಪತಿ ಎಂ ವೆಂಕಯ್ಯ ನಾಯ್ಡು ಅವರು ಕಲಾಪವನ್ನು ಮಧ್ಯಾಹ್ನ 12ಕ್ಕೆ ಮುಂದೂಡಿದರು. ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ಮೂರು ದಿನಗಳು ಯಾವುದೇ ಫಲಪ್ರದ ಚರ್ಚೆಗಳು ನಡೆಯದೆ ರದ್ದಾಗಿವೆ.

ಸರ್ಕಾರ ಚರ್ಚೆಗೆ ಸಿದ್ಧವಿದೆ: ಸದನದಲ್ಲಿ ವಸ್ತುಗಳ ಬೆಲೆ ಏರಿಕೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದರೂ ವಿಪಕ್ಷಗಳು ಕಲಾಪ ನಡೆಯಲು ಬಿಡುತ್ತಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸದನದಲ್ಲಿಯೇ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಇಡಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಎಲ್ಲಕ್ಕಿಂತ ಮೇಲಿನವರೇ, ಕಾನೂನಿಗಿಂತ ದೊಡ್ಡವರೇ ಎಂದು ಸಹ ಕೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com