ಕೋಲ್ಕತ್ತಾ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನುಬ್ಯಾಂಕ್ ಶಾಲ್ ಕೋರ್ಟ್ ಎರಡು ದಿನ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಆದೇಶಿಸಿದೆ.
ಪಶ್ಚಿಮ ಬಂಗಾಳದ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಅವರನ್ನು ಇಡಿ ಸುಮಾರು 26 ಗಂಟೆಗಳ ಕಾಲ ವಿಚಾರಣೆ ಬಳಿಕ ಬಂಧಿಸಿದ್ದು, ಬಳಿಕ ಬ್ಯಾಂಕ್ ಶಾಲ್ ಕೋರ್ಟ್ ಮುಂದೆ ಹಾಜರುಪಡಿಸಿತು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿ ಸಚಿವರನ್ನು ಎರಡು ದಿನ ಇಡಿ ವಶಕ್ಕೆ ನೀಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ನ್ಯಾಯಾಲಯಕ್ಕೆ ಇಂದು ರಜೆ ಇದ್ದ ಕಾರಣ ಆರೋಪಿಯನ್ನು ಬ್ಯಾಂಕ್ ಶಾಲ್ ಕೋರ್ಟ್ ಗೆ ಹಾಜರುಪಡಿಸಲಾಯಿತು.
ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಗೆ ಸೇರಿದ ಇಬ್ಬರು ಸಚಿವರು ಸೇರಿದಂತೆ ಸುಮಾರು ಹನ್ನೆರಡು ಜನರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿತು. ಸಚಿವ ಪಾರ್ಥ ಚಟರ್ಜಿ ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಸಂಜೆ ದಾಳಿ ನಡೆಸಿದ್ದು, ಸುಮಾರು 20 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.
Advertisement