ರುವಳ್ಳೂರು: ತಮಿಳುನಾಡಿನಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ವರದಿಯಾಗಿದೆ. ತಿರುವಳ್ಳೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಶಾಲೆಯ 12ನೇ ತರಗತಿಯ ವಿದ್ಯಾರ್ಥಿನಿ ಇಂದು ತನ್ನ ಹಾಸ್ಟೆಲ್ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಮತ್ತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಾವು ಹೆಚ್ಚಿಗೆ ಏನನ್ನೂ ಹೇಳಲಾರೆ' ಎಂದು ತಿರುವಳ್ಳೂರಿನ ಪೊಲೀಸ್ ವರಿಷ್ಠಾಧಿಕಾರಿ ಸೆಫಾಸ್ ಕಲ್ಯಾಣ್ ತಿಳಿಸಿದ್ದಾರೆ. ಪ್ರಕರಣವನ್ನು ರಾಜ್ಯ ಪೊಲೀಸರ ಸಿಬಿ-ಸಿಐಡಿ ವಿಭಾಗಕ್ಕೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದರು.
ಆಕೆಯ ಪೋಷಕರು ಮತ್ತು ಸಂಬಂಧಿಕರ ಪ್ರತಿಭಟನೆಯ ನಡುವೆ ಶಾಲೆಯಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ. ಮೃತ ವಿದ್ಯಾರ್ಥಿನಿ ಸರಳಾ ತಮಿಳುನಾಡಿನ ತಿರುಟ್ಟಣಿಯವರಾಗಿದ್ದು ಯಾವುದೇ ಕಾನೂನು ಸುವ್ಯವಸ್ಥೆ ಹದಗೆಡದಂತೆ ಆಕೆಯ ಗ್ರಾಮದಲ್ಲಿಯೂ ಭದ್ರತೆಯನ್ನೂ ನಿಯೋಜಿಸಲಾಗಿದೆ.
ಜುಲೈ 13ರಂದು, ಕಲ್ಲಕುರಿಚಿ ಜಿಲ್ಲೆಯ ಮೆಟ್ರಿಕ್ಯುಲೇಷನ್ ಶಾಲೆಯ 12ನೇ ತರಗತಿಯ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಯಿತು.ಘಟನೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಗಾಯಗೊಂಡರು. ಪ್ರತಿಭಟನಾಕಾರರು ಕನಿಷ್ಠ 15 ಬಸ್ಗಳಿಗೆ ಬೆಂಕಿ ಹಚ್ಚಿದ್ದರು.
ಶಾಲೆಯ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಶವಪರೀಕ್ಷೆ ವರದಿಗಳನ್ನು ವಿಶ್ಲೇಷಿಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ವೈದ್ಯರ ತಂಡಕ್ಕೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಶಿಕ್ಷಣ ಸಂಸ್ಥೆಗಳಲ್ಲಿನ ಸಾವುಗಳನ್ನು ಭವಿಷ್ಯದಲ್ಲಿ ರಾಜ್ಯ ತನಿಖಾ ಸಂಸ್ಥೆ ಸಿಬಿ-ಸಿಐಡಿ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ಹೇಳಿದೆ.
Advertisement