ಸಂಸತ್ ಅಧಿವೇಶನ: ಪ್ರತಿಪಕ್ಷಗಳ ಪ್ರತಿಭಟನೆ; ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಿಕೆ

ಸಂಸತ್ತಿನ ಮುಂಗಾರು ಅಧಿವೇಶನದ ಏಳನೇ ದಿನವಾದ ಇಂದು ಕೂಡಾ ಪ್ರತಿಪಕ್ಷಗಳು ಲೋಕಸಭೆಯಲ್ಲಿ  ಪ್ರತಿಭಟನೆ, ಗದ್ದಲವೆಬ್ಬಿಸಿದರಿಂದ  ಕಲಾಪವನ್ನು ಮಧ್ಯಾಹ್ನ 2 ಗಂಟೆಗಳವರೆಗೂ ಮುಂದೂಡಲಾಯಿತು.
ಲೋಕಸಭೆ
ಲೋಕಸಭೆ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಏಳನೇ ದಿನವಾದ ಇಂದು ಕೂಡಾ ಪ್ರತಿಪಕ್ಷಗಳು ಲೋಕಸಭೆಯಲ್ಲಿ 
ಪ್ರತಿಭಟನೆ, ಗದ್ದಲವೆಬ್ಬಿಸಿದರಿಂದ  ಕಲಾಪವನ್ನು ಮಧ್ಯಾಹ್ನ 2 ಗಂಟೆಗಳವರೆಗೂ ಮುಂದೂಡಲಾಯಿತು.

ಬೆಳಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ, ಜಿಎಸ್ ಟಿ, ಹಣದುಬ್ಬರ ಸೇರಿದಂತೆ  ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದ್ದರಿಂದ  11-45ರವರೆಗೂ ಕಲಾಪವನ್ನು ಮುಂದೂಡಲಾಗಿತ್ತು.  ಬಳಿಕ ಕಲಾಪ ಸಮಾವೇಶಗೊಳ್ಳುತ್ತಿದ್ದಂತೆ ಪಟ್ಟು ಬಿಡದ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದರಿಂದ ಮಧ್ಯಾಹ್ನ 2 ಗಂಟೆಗೆ ಕಲಾಪ ಮುಂದೂಡಲ್ಪಟ್ಟಿತು.

ಇತ್ತ ರಾಜ್ಯಸಭೆಯಲ್ಲೂ ಪ್ರತಿಪಕ್ಷಗಳು ಪ್ರತಿಭಟನೆಯನ್ನು ಮುಂದುವರೆಸಿದ್ದರಿಂದ ಮಧ್ಯಾಹ್ನ 12 ಗಂಟೆಯವರೆಗೂ ಮುಂದೂಡಲಾಗಿತ್ತು.  ಬಳಿಕ ಮತ್ತೆ ಸಮಾವೇಶಗೊಂಡಾಗ ಪ್ರಶ್ನೋತ್ತರ ಕಲಾಪವನ್ನು ಪುನರ್ ಆರಂಭಿಸಲಾಯಿತು.

ಹಣದುಬ್ಬರ, ನಿರುದ್ಯೋಗ ಮತ್ತು ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಮೇಲಿನ ಚರ್ಚೆಗೆ ಬಿಗಿಪಟ್ಟು ಹಿಡಿದಿರುವ ಪ್ರತಿಪಕ್ಷಗಳು ಸಂಸತ್ ಅಧಿವೇಶನ ಆರಂಭವಾದ ದಿನದಿಂದಲೂ ಪ್ರತಿಭಟನೆ ನಡೆಸುತ್ತಾ ಬಂದಿವೆ.

ಅಮಾನತುಗೊಂಡ ಕಾಂಗ್ರೆಸ್ ಸದಸ್ಯರ ಪ್ರತಿಭಟನೆ: ಸದನದೊಳಗಡೆ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ಸೋಮವಾರ ಅಮಾನತುಗೊಂಡಿದ್ದ ಕಾಂಗ್ರೆಸ್ ಪಕ್ಷದ ನಾಲ್ವರು ಸಂಸದರು ಇಂದು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ವಿವಿಧ ವಿಪಕ್ಷಗಳ ಮುಖಂಡರು ಕೂಡಾ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಅಮಾನತುಗೊಂಡ ಸಂಸದರಾದ ಮಾಣಿಕಂ ಟ್ಯಾಗೋರ್, ರಮ್ಯಾ ಹರಿದಾಸ್, ಟಿ ಎನ್ ಪ್ರತಾಪನ್ ಮತ್ತು ಎಸ್ ಜೋತಿ ಮಣಿ, ತಮ್ಮನ್ನು ಅಮಾನತು ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಎಡಪಕ್ಷಗಳು, ಎನ್ ಸಿಪಿ, ಡಿಎಂಕೆ ಸದಸ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com