2002ರ ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್; ಜಾಕಿಯಾ ಜಾಫ್ರಿ ಅರ್ಜಿ ವಜಾ

2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ-ಜಾಕಿಯಾ ಜಾಫ್ರಿ(ಸಂಗ್ರಹ ಚಿತ್ರ)
ಪ್ರಧಾನಿ ನರೇಂದ್ರ ಮೋದಿ-ಜಾಕಿಯಾ ಜಾಫ್ರಿ(ಸಂಗ್ರಹ ಚಿತ್ರ)

ನವದೆಹಲಿ: 2002ರ ಗುಜರಾತ್ ಗಲಭೆ (Gujarat riot) ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ಸಿಕ್ಕಿದೆ.  ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ವಿಧವೆ ಪತ್ನಿ ಜಾಕಿಯಾ ಜಾಫ್ರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾ ಮಾಡಿದೆ. ಪ್ರಕರಣದಲ್ಲಿ ಪಿಎಂ ಮೋದಿ ಸೇರಿದಂತೆ ಹಲವರಿಗೆ ವಿಶೇಷ ತನಿಖಾ ತಂಡ (SIT) ಈ ಹಿಂದೆ ಕ್ಲೀನ್ ಚಿಟ್ ನೀಡಿತ್ತು.

ಅದನ್ನು ಪ್ರಶ್ನಿಸಿ ಜಾಕಿಯಾ ಜಾಫ್ರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಅಲ್ಲಿ ಕೂಡ ಅಪಜಯವಾಗಿದೆ.
2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಗಲಭೆಯಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರ 63 ಮಂದಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೀಡಿದ ಕ್ಲೀನ್ ಚಿಟ್ ಅನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಹತ್ಯೆಯಾದ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಅವರ ಮನವಿಯನ್ನು ವಜಾಗೊಳಿಸಿದೆ.

ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠವು 2012 ರಲ್ಲಿ ಎಸ್‌ಐಟಿ ಸಲ್ಲಿಸಿದ ಮುಕ್ತಾಯ ವರದಿಯ ವಿರುದ್ಧ ಝಕಿಯಾ ಜಾಫ್ರಿ ಅವರ ಪ್ರತಿಭಟನಾ ಅರ್ಜಿಯನ್ನು ತಿರಸ್ಕರಿಸಿದ ಮ್ಯಾಜಿಸ್ಟ್ರೇಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ಪೀಠ, ಜಾಕಿಯಾ ಜಾಫ್ರಿ ಮನವಿಯು ಅರ್ಹತೆ ಹೊಂದಿಲ್ಲ ಎಂದು ಹೇಳಿದೆ. 

2002ರ ಗುಜರಾತ್ ಗಲಭೆಯಲ್ಲಿ ದೊಡ್ಡ ಪಿತೂರಿ ನಡೆದಿದೆ ಎಂದು ಜಾಕಿಯಾ ಆರೋಪಿಸಿದ್ದರು. ಫೆಬ್ರವರಿ 28, 2002 ರಂದು ಗೋಧ್ರಾ ರೈಲು ದಹನದ ಒಂದು ದಿನದ ನಂತರ ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಹಿಂಸಾಚಾರದ ಸಂದರ್ಭದಲ್ಲಿ ಕೊಲ್ಲಲ್ಪಟ್ಟ 68 ಜನರಲ್ಲಿ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಎಹ್ಸಾನ್ ಜಾಫ್ರಿ ಕೂಡ ಒಬ್ಬರು. 

2002ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿ ಸೇರಿದಂತೆ 64 ಮಂದಿಗೆ ಎಸ್‌ಐಟಿ ಕ್ಲೀನ್ ಚಿಟ್ ನೀಡಿದ್ದರ ವಿರುದ್ಧ ಜಾಕಿಯಾ ಜಾಫ್ರಿ ಸವಾಲು ಹಾಕಿದ್ದರು. 

ಕಳೆದ ವರ್ಷ ಡಿಸೆಂಬರ್ 9 ರಂದು ಸುಪ್ರೀಂ ಕೋರ್ಟ್ ಅರ್ಜಿಯ ತೀರ್ಪನ್ನು ಕಾಯ್ದಿರಿಸಿತ್ತು. ಸುಪ್ರೀಂ ಕೋರ್ಟ್, ಝಾಕಿಯಾ ಜಾಫ್ರಿ ಅವರ ಅರ್ಜಿಯನ್ನು ಹೊರತುಪಡಿಸಿ, 2002 ರ ಗುಜರಾತ್ ಗಲಭೆಯಲ್ಲಿ ನಡೆಸಿದ ತನಿಖೆಗಾಗಿ ಯಾರೂ ಅದರ ವಿರುದ್ಧ ಬೆರಳು ತೋರಿಸಿಲ್ಲ ಎಂದು ವಿಚಾರಣೆ ಸಂದರ್ಭದಲ್ಲಿ ಹೇಳಿದೆ. 

"ಅಧಿಕಾರಶಾಹಿ ನಿಷ್ಕ್ರಿಯತೆ, ಪೋಲೀಸರ ಸಹಭಾಗಿತ್ವ, ದ್ವೇಷಪೂರಿತ ಭಾಷಣಗಳು ಮತ್ತು ಹಿಂಸಾಚಾರದ ಅನಾವರಣ ಇರುವಲ್ಲಿ ದೊಡ್ಡ ಪಿತೂರಿ ನಡೆದಿದೆ ಎಂದು ಜಾಕಿಯಾ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದರು. 

ಫೆಬ್ರವರಿ 27, 2002 ರಂದು, ಗೋಧ್ರಾದಲ್ಲಿ ಸಬರಮತಿ ಎಕ್ಸ್‌ಪ್ರೆಸ್‌ನ ಎಸ್ -6 ಕೋಚ್ ಅನ್ನು ಸುಟ್ಟುಹಾಕಿದಾಗ 59 ಜನರು ದಾರುಣವಾಗಿ ಮೃತಪಟ್ಟಿದ್ದರು. ಇದರ ವಿರುದ್ಧ ನಂತರ ರಾಜ್ಯದಲ್ಲಿ ತೀವ್ರ ಗದ್ದಲ, ಗಲಭೆ ಉಂಟಾಗಿತ್ತು. 

ಫೆಬ್ರುವರಿ 8, 2012 ರಂದು, SIT ಪ್ರಸ್ತುತ ಪ್ರಧಾನಿ ಮೋದಿ ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳು ಸೇರಿದಂತೆ 63 ಇತರರಿಗೆ ಕ್ಲೀನ್ ಚಿಟ್ ನೀಡುವ ಮುಕ್ತಾಯ ವರದಿಯನ್ನು ಸಲ್ಲಿಸಿತು, ಅವರ ವಿರುದ್ಧ ಯಾವುದೇ ಪ್ರಾಸಿಕ್ಯೂಟಬಲ್ ಸಾಕ್ಷ್ಯಗಳಿಲ್ಲ ಎಂದು ಹೇಳಿತ್ತು. ಜಾಕಿಯಾ ಜಾಫ್ರಿ 2018 ರಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com