ಮಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಸರ್ಕಾರವನ್ನು ರಕ್ಷಿಸುವ ನಿಟ್ಟಿನಲ್ಲಿ ಶಿವಸೇನೆಯು ಶನಿವಾರ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಕರೆದಿದ್ದು, ಸಭೆಯಲ್ಲಿ ಮುಂದಿನ ಕ್ರಮದ ಕುರಿತು ಚರ್ಚೆಗಳು ನಡೆಯಲಿದೆ ಎಂದು ತಿಳಿದುಬಂದಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಶಿವಸೇನೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಂಡಾಯ ಶಾಸಕರ ವಿರುದ್ಧ ಕೈಗೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಚರ್ಚೆಗಳು ನಡೆಯಲಿವೆ ಎನ್ನಲಾಗುತ್ತಿದೆ. ಸಭೆ ಬಳಿಕ 16 ಬಂಡಾಯ ಶಿವಸೇನೆ ಶಾಸಕರಿಗೆ ಅನರ್ಹತೆ ನೋಟಿಸ್ ಕಳುಹಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ಬಂಡಾಯ ನಾಯಕ ಏಕನಾಥ್ ಶಿಂಧೆ ಬಣಕ್ಕೆ ಮತ್ತೋರ್ವ ಶಾಸಕ ಸೇರಿಕೊಂಡಿದ್ದು, ಅಸ್ಸಾಂ ರಾಜಧಾನಿಯಲ್ಲಿ ಬೀಡುಬಿಟ್ಟ ಶಿವಸೇನೆ ಶಾಸಕರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಅರ್ಹನತೆ ಭೀತಿಯಿಂದ (56ರ ಶಾಸಕರಲ್ಲಿ ಮೂರನೇ ಎರಡರಷ್ಟು ಸಂಖ್ಯೆ 37) ಶಾಸಕರು ಪಾರಾಗಿದ್ದಾರೆ. ಇದರೊಂದಿಗೆ ಶಿವಸೇನೆ-ಎನ್'ಸಿಪಿ-ಕಾಂಗ್ರೆಸ್ ಮೈತ್ರಿಕೂಟ ಹೊಂದಿರುವ ಉದ್ಧವ್ ಠಾಕ್ರೆ ಮುಖ್ಯಂತ್ರಿಯಾಗಿರುವ ಸರ್ಕಾರ ಪತನಗೊಳ್ಳಲು ಕ್ಷಣಗಣನೆ ಆರಂಭವಾಗಿದೆ.
ಇದರೊಂದಿಗೆ ಶಿಂಧೆ ಬಣದಲ್ಲಿರುವ ಶಾಸಕರ ಸಂಖ್ಯೆ ಪಕ್ಷೇತರರೂ ಸೇರಿ 50ಕ್ಕೇರಿದೆ. ಹೀಗಾಗಿ ಶಿವಸೇನೆ, ಎನ್'ಸಿಪಿ, ಕಾಂಗ್ರೆಸ್ ಮೈತ್ರಿಕೂಟದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತವಾಗಿದ್ದು, ಹೊಸ ಮುಖ್ಯಮಂತ್ರಿ ಯಾರಾಗಲಿದ್ದಾರೆಂಬ ಕುತೂಹಲ ಗರಿಗೆದರಿದೆ.
ಥಾಣೆಯಲ್ಲಿ ನಿಷೇಧಾಜ್ಞೆ ಜಾರಿ
ರಾಜ್ಯ ರಾಜಕೀಯ ವಲಯದಲ್ಲಿ ಬಿಕ್ಕಟ್ಟು ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಥಾಣೆಯಲ್ಲಿ ಜಿಲ್ಲಾ ಆಡಳಿತ ಮಂಡಳಿಯು ಜೂನ್ 30ರವರೆಗೆ ಸೆಕ್ಷನ್ 144 ಜಾರಿ ಮಾಡಿದ್ದಾರೆ.
ಸೆಕ್ಷನ್ 144 ಜಾರಿ ಹಿನ್ನೆಲೆಯಲ್ಲಿ ಥಾಣೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಮೆರವಣಿಗೆ, ಘೋಷಣಾ ವಾಕ್ಯಗಳು ಕೂಗುವುದು, ಜನರು ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ.
Advertisement