ನವದೆಹಲಿ: ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ಬಂಧನ ವಿರೋಧಿಸಿ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದರು.
ಸೆಟಲ್ವಡ್ ಅವರ ಬಂಧನ ಇತರ ಸಾಮಾಜಿಕ ಹೋರಾಟಗಾರರ ಧ್ವನಿಯನ್ನು ಅಡಗಿಸುವ ಪ್ರಯತ್ನ, ಪೂರ್ವ ಯೋಜಿತ ಸಂಚು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಾಂಗ್ರೆಸ್ ಹಿರಿಯ ಮುಖಂಡರಾದ ಜೈರಾಮ್ ರಮೇಶ್ ಹಾಗೂ ಅಜಯ್ ಮಾಕೆನ್ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಜಂಥರ್ ಮಂತರ್ ನಲ್ಲಿ ಜಮಾಯಿಸಿದ್ದ ಸುಮಾರು 300ಕ್ಕೂ ಹೆಚ್ಚು ಪ್ರತಿಭಟನಾಕಾರರು ಸೆಟಲ್ವಡ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಆರ್. ಬಿ. ಶ್ರೀಕುಮಾರ್, ಸಂಜೀವ್ ಭಟ್ ಅವರ ಬಿಡುಗಡೆಗೆ ಒತ್ತಾಯಿಸಿ ಘೋಷಣೆ ಕೂಗಿದರು. ಕಾಂಗ್ರೆಸ್ ಪಕ್ಷ ಈ ಮೂವರನ್ನು ಬೆಂಬಲಿಸಲಿದ್ದು, ಆದಷ್ಟು ಬೇಗ ಬಿಡುಗಡೆ ಮಾಡಬೇಕೆಂದು ಅಜಯ್ ಮಾಕನ್ ಹೇಳಿದರು.
ಕೇಂದ್ರ ಸರ್ಕಾರ ದೇಶದಲ್ಲಿನ ಇತರ ಸಾಮಾಜಿಕ ಹೋರಾಟಗಾರರ ಧ್ವನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದೆ. ಸೆಟಲ್ವಡ್ ಅವರ ಬಂಧನ ಪೂರ್ವ ಯೋಜಿತ ಸಂಚು ಆಗಿದ್ದು, ಇದನ್ನು ನಾವು ಖಂಡಿಸುತ್ತೇವೆ ಎಂದು ಸಾಮಾಜಿಕ ಹೋರಾಟಗಾರ್ತಿ ಶಬ್ಮಾಮ್ ಹಸ್ಮಿ ಆಕ್ರೋಶ ವ್ಯಕ್ತಪಡಿಸಿದರು.
Advertisement