ತೀಸ್ತಾ ಸೆಟಲ್ವಾಡ್'ಗೆ ಕೊಟ್ಟಿದ್ದ ಪದ್ಮ ಪ್ರಶಸ್ತಿ ಹಿಂಪಡೆಯಿರಿ: ಕೇಂದ್ರಕ್ಕೆ ಮಧ್ಯ ಪ್ರದೇಶ ಸಚಿವ ಆಗ್ರಹ

2002ರ ಗುಜರಾತ್‌ ಗಲಭೆಗೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಾಧಾರ ಸೃಷ್ಟಿಸಿದ ಪ್ರಕರಣದಲ್ಲಿ ಇತ್ತೀಚೆಗೆ ಗುಜರಾತ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಗೆ ನೀಡಲಾದ 'ಪದ್ಮಶ್ರೀ' ಪ್ರಶಸ್ತಿಯನ್ನು ಹಿಂಪಡೆಯುವಂತೆ...
ತೀಸ್ತಾ ಸೆಟಲ್ವಾಡ್
ತೀಸ್ತಾ ಸೆಟಲ್ವಾಡ್

ಭೋಪಾಲ್: 2002ರ ಗುಜರಾತ್‌ ಗಲಭೆಗೆ ಸಂಬಂಧಿಸಿದಂತೆ ನಕಲಿ ಸಾಕ್ಷ್ಯಾಧಾರ ಸೃಷ್ಟಿಸಿದ ಪ್ರಕರಣದಲ್ಲಿ ಇತ್ತೀಚೆಗೆ ಗುಜರಾತ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಗೆ ನೀಡಲಾದ 'ಪದ್ಮಶ್ರೀ' ಪ್ರಶಸ್ತಿಯನ್ನು ಹಿಂಪಡೆಯುವಂತೆ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಒತ್ತಾಯಿಸಿದ್ದಾರೆ.

2007ರಲ್ಲಿ ಕೇಂದ್ರ ಸರ್ಕಾರ ಸೆಟಲ್ವಾಡ್ ಗೆ ಪದ್ಮಶ್ರೀ ನೀಡಿ ಗೌರವಿಸಿತು. ಇದು ವಿವಿಧ ಕ್ಷೇತ್ರಗಳಲ್ಲಿ ಜನರ ಕೊಡುಗೆಯನ್ನು ಗುರುತಿ ನೀಡುವ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾಗಿದೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಿಶ್ರಾ, ಹಿಂದಿನ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗಾಗಿ ಸೆಟಲ್ವಾಡ್ ಅವರಿಗೆ ಪ್ರಶಸ್ತಿ ನೀಡಿದೆ ಎಂದು ಆರೋಪಿಸಿದ್ದಾರೆ.

ತೀಸ್ತಾ 'ಪ್ರಶಸ್ತಿ ವಾಪ್ಸಿ' ಗ್ಯಾಂಗ್‌ನ ಸದಸ್ಯರಾಗಿದ್ದರು(ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಬೆದರಿಕೆ ಹಾಕುವವರು) ತೀಸ್ತಾ ಜಾವೇದ್ ಸೆಟಲ್ವಾಡ್ ಅವರಂತಹ ಜನರ ವಿರುದ್ಧ ಸುಪ್ರೀಂ ಕೋರ್ಟ್‌ ಟೀಕೆ ಹಿನ್ನೆಲೆಯಲ್ಲಿ ಪ್ರಶಸ್ತಿಯನ್ನು ಹಿಂಪಡೆಯಬೇಕು. ತೀಸ್ತಾರ ನಡವಳಿಕೆಯು ಪ್ರಶ್ನಾರ್ಹವಾಗಿದ್ದು ಆಕೆಯನ್ನು ಬಂಧಿಸಲಾಗಿದೆ ಎಂದು ರಾಜ್ಯ ಸರ್ಕಾರ ವಕ್ತಾರರೂ ಆಗಿರುವ ಸಚಿವರು ಹೇಳಿದರು.

ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಸೆಟಲ್ವಾಡ್ ಅವರನ್ನು ಮುಂಬೈನ ಮನೆಯಿಂದ ವಶಕ್ಕೆ ಪಡೆದಿದ್ದರು. ನಂತರ ಆಕೆಯನ್ನು ಅಹಮದಾಬಾದ್‌ಗೆ ಕರೆದೊಯ್ದು ಅಲ್ಲಿನ ಅಪರಾಧ ವಿಭಾಗಕ್ಕೆ ಒಪ್ಪಿಸಲಾಯಿತು.

2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸಲು ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಪ್ರಕರಣದಲ್ಲಿ ಅಹಮದಾಬಾದ್‌ನ ನ್ಯಾಯಾಲಯವು ಭಾನುವಾರ ಸೆಟಲ್ವಾಡ್ ಅವರನ್ನು ಜುಲೈ 2ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕಳೆದ ಶುಕ್ರವಾರ ವಜಾಗೊಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com