ಅಹಮದಾಬಾದ್: ಮೊರ್ಬಿ ಸೇತುವೆ ಕುಸಿತದ ದುರಂತಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಗುಜರಾತ್ ಹೈಕೋರ್ಟ್, ಗುಜರಾತ್ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ನವೆಂಬರ್ 14 ರೊಳಗೆ ಪ್ರಕರಣದ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸೋಮವಾರ ಸೂಚನೆ ನೀಡಿದೆ.
ಅಕ್ಟೋಬರ್ 30 ರಂದು ಮೊರ್ಬಿಯಲ್ಲಿ ತೂಗು ಸೇತುವೆಯ ಕುಸಿದುಬಿದ್ದು, ಮಕ್ಕಳು, ಮಹಿಳೆಯರು ಸೇರಿ 135ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.
ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಅಶುತೋಷ್ ಶಾಸ್ತ್ರಿ ನೇತೃತ್ವದ ವಿಭಾಗೀಯ ಪೀಠವು, ಮುಖ್ಯ ಕಾರ್ಯದರ್ಶಿ, ರಾಜ್ಯ ಗೃಹ ಇಲಾಖೆ, ಪುರಸಭೆಗಳ ಆಯುಕ್ತರು, ಮೊರ್ಬಿ ಪುರಸಭೆ, ಜಿಲ್ಲಾಧಿಕಾರಿ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗದ ಮೂಲಕ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ನವೆಂಬರ್ 14 ರಂದು ಪ್ರಕರಣವನ್ನು ಮರುಪರಿಶೀಲಿಸುವುದಾಗಿ ತಿಳಿಸಿದೆ.
ಅಲ್ಲದೆ, ಮುಂದಿನ ಸೋಮವಾರದೊಳಗೆ ಪ್ರಕರಣ ವಿಚಾರಣೆಗೆ ಬಂದಾಗ ಪ್ರಕರಣದ ಸ್ಥಿತಿಗತಿ ವರದಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ ಮತ್ತು ಗೃಹ ಕಾರ್ಯದರ್ಶಿಗಳಿಗೆ ಸೂಚಿಸಿದೆ.
ದಿನಪತ್ರಿಕೆಗಳ ವರದಿ ಆಧಾರದ ಮೇಲೆ ನ್ಯಾಯಾಲಯ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ನವೆಂಬರ್ 14 ರೊಳಗೆ ಸ್ಥಿತಿಗತಿ ವರದಿ ಸಲ್ಲಿಸುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಸೂಚಿಸಿದೆ.
Advertisement