ಕೃಷ್ಣನಗರ: ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್ಆರ್ಸಿ) ಯನ್ನು ಬಳಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಿಎಎ ಅನುಷ್ಠಾನಕ್ಕೆ ನಾನು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್(ಟಿಎಂಸಿ) ಮುಖ್ಯಸ್ಥೆ ಹೇಳಿದ್ದಾರೆ.
ಕೇಸರಿ ಪಾಳಯ ಪಶ್ಚಿಮ ಬಂಗಾಳದಲ್ಲಿ ಪ್ರತ್ಯೇಕತಾವಾದವನ್ನು ಬೆಳೆಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಮಮತಾ ಬ್ಯಾನರ್ಜಿ, ಪ್ರತ್ಯೇಕ ರಾಜ್ಯದ ಬೇಡಿಕೆಗಳನ್ನು ಎತ್ತಿ ಹಿಡಿಯುವ ಮೂಲಕ ರಾಜ್ಯ ವಿಭಜನೆಗೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದರು.
“ಯಾವುದೇ ಚುನಾವಣೆ ಸಮೀಪಿಸಿದಾಗ, ಬಿಜೆಪಿಯು ಸಿಎಎ ಮತ್ತು ಎನ್ಆರ್ಸಿಯನ್ನು ಜಾರಿಗೊಳಿಸುವ ಬಗ್ಗೆ ಮಾತನಾಡುತ್ತದೆ. ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆ ಮತ್ತು ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಸಿಎಎ ಸಮಸ್ಯೆ ಉಲ್ಬಣಗೊಳಿಸಲು ಪ್ರಾರಂಭಿಸಿದೆ ಎಂದರು.
ಕೃಷ್ಣನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, "ಯಾರು ಈ ದೇಶದ ನಾಗರಿಕರು ಮತ್ತು ಯಾರು ಅಲ್ಲ ಎಂಬುದನ್ನು ಬಿಜೆಪಿ ನಿರ್ಧರಿಸುತ್ತದೆಯೇ? ಮಾತುವಾ ಈ ದೇಶದ ಪ್ರಜೆಗಳು" ಎಂದು ಹೇಳಿದರು.
Advertisement